ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುವೆಂಪು ಅವರದು ಸೃಜನಶೀಲ ಸಾಹಿತ್ಯ

Last Updated 30 ಡಿಸೆಂಬರ್ 2017, 6:40 IST
ಅಕ್ಷರ ಗಾತ್ರ

ಬಳ್ಳಾರಿ: ‘ಕುವೆಂಪು ಅವರ ಸಾಹಿತ್ಯವು ಸೃಜನಶೀಲತೆಯಿಂದ ಕೂಡಿದೆಯಲ್ಲದೇ ಸತ್ಯವನ್ನು ಅನಾವರಣಗೊಳಿಸುತ್ತದೆ’ ಎಂದು ರಾಜ್ಯ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಕೃಷ್ಣ ಪ್ರತಿಪಾದಿಸಿದರು.

ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪಾಲಿಕೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಮಾನವ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ಸೃಜನಾತ್ಮಕ ಜೀವನ ಚರಿತ್ರೆ, ಸಾಹಿತ್ಯ ವಿಮರ್ಶೆ, ಕಾವ್ಯಮೀಮಾಂಸೆ, ನಾಟಕ, ಕತೆ ಹಾಗೂ ಕಾದಂಬರಿಯ ಕ್ಷೇತ್ರಗಳಿಗೆ ಅವರ ಕೊಡುಗೆ ಸ್ಮರಣೀಯವಾಗಿದೆ. ಅಲ್ಲದೇ, ಸಾಹಿತ್ಯದ ಮೂಲಕ ಚಿರಂಜೀವಿಯಾಗಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

‘ಕನ್ನಡ ಸಾಹಿತ್ಯವನ್ನು ಮೇರು ಶಿಖರಕ್ಕೆ ಕೊಂಡೊಯ್ದ ಮಹಾನ್ ಚೇತನ. ನಮ್ಮ ತಲೆಮಾರನ್ನು ವೈಚಾರಿಕ ಅಂಗಳಕ್ಕೆ ಕರೆದೊಯ್ದು ಪರಿಚಯಿಸಿದ ಅದ್ಭುತ ವಿಚಾರವಂತರು. ಅವರ ಸಂದೇಶ ಸದಾ ಕಾಲಕ್ಕೂ ಪ್ರಸ್ತುತ’ ಎಂದು ಬಣ್ಣಿಸಿದರು.

‘ಕುವೆಂಪು ಅವರು ನಮ್ಮ ಹೆಮ್ಮೆಯ ರಾಷ್ಟ್ರಕವಿ. ನಾಡಿನ ವೈಚಾರಿಕ ವಲಯದ ಸಾಕ್ಷಿಪ್ರಜ್ಞೆಯಂತಿದ್ದ ಅವರ ಜನ್ಮದಿನವನ್ನು ವಿಶ್ವ ಮಾನವ ದಿನವನ್ನಾಗಿ ಆಚರಿಸುತ್ತಿರುವುದು ಶ್ಲಾಘನೀಯ’ ಎಂದು ಹರ್ಷ ವ್ಯಕ್ತಪಡಿಸಿದರು.

ಮೇಯರ್ ಜಿ.ವೆಂಕಟರಮಣ ಮಾತನಾಡಿ, ‘ಕುವೆಂಪು ಅವರು ನಾಡು- ನುಡಿ ಕಟ್ಟುವ ಕಾಯಕದಲ್ಲಿ ಸದಾ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಅವರ ಆದರ್ಶಗಳನ್ನುಇಂದಿನ ಪೀಳಿಗೆ ಮೈಗೂಡಿಸಿಕೊಳ್ಳುವುದು ಅಗತ್ಯವಿದೆ’ ಎಂದರು. ನಿವೃತ್ತ ಚಿತ್ರಕಲಾ ಶಿಕ್ಷಕ ಕೆ.ಬಿ.ಸಿದ್ಧಲಿಂಗಪ್ಪ ವಿಶೇಷ ಉಪನ್ಯಾಸ ನೀಡಿದರು. ಇದೇ ವೇಳೆ ವಿಶ್ವ ಮಾನವ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಗಣ್ಯರು ಬಹುಮಾನ ವಿತರಿಸಿದರು.

ಪಾಲಿಕೆ ಸದಸ್ಯ ಕೆರಕೊಡಪ್ಪ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದರಾಮ ಕಲ್ಮಠ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಪ್ರೋಬೆಷನರಿ ತಹಸೀಲ್ದಾರರಾದ ಮಹಾಬಲೇಶ್ವರ, ಕಾಳಮ್ಮ ಮತ್ತು ಮಂಜುನಾಥ ಉಪಸ್ಥಿತರಿದ್ದರು. ವಿನೋದ್ ನಿರೂಪಿಸಿದರು.

ಗುರು ಪುಟ್ಟರಾಜ ಸಂಗೀತ ಪಾಠಶಾಲೆ ವಿದ್ಯಾರ್ಥಿಗಗಳು ಕುವೆಂಪು ಗೀತೆಗಳನ್ನು ಹಾಡಿದರು. ಸೂರ್ಯಕಲಾ ಟ್ರಸ್ಟ್‌ನ ತಂಡವು ನಡೆಸಿಕೊಟ್ಟ ಸಮೂಹ ನೃತ್ಯಕ್ಕೆ ನೆರೆದಿದ್ದವರನ್ನು ಮಂತ್ರಮುಗ್ಧರನ್ನಾಗಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT