ನವದೆಹಲಿ: ಮಹದಾಯಿ ಜಲವಿವಾದ ಬಗೆಹರಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೂಡಲೇ ಮಧ್ಯ ಪ್ರವೇಶಿಸಬೇಕು ಎಂದು ಕಾಂಗ್ರೆಸ್ನ ತುಮಕೂರು ಸಂಸದ ಎಸ್.ಪಿ. ಮುದ್ದಹನುಮೇಗೌಡ ಲೋಕಸಭೆಯಲ್ಲಿ ಮಂಗಳವಾರ ಆಗ್ರಹಿಸಿದರು.
ಶೂನ್ಯವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ಉತ್ತರ ಕರ್ನಾಟಕ ಭಾಗದ ಜನರು ಅನೇಕ ವರ್ಷಗಳಿಂದ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ಮಹದಾಯಿ ನದಿಯ ನೀರನ್ನು ಮಲಪ್ರಭಾ ನದಿಗೆ ತಿರುಗಿಸುವ ಯೋಜನೆಗೆ ಗೋವಾ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ. ಪ್ರಧಾನಿ ಮಧ್ಯ
ಪ್ರವೇಶಿಸದಿದ್ದರೆ ಈ ಸಮಸ್ಯೆ ಬಗೆಹರಿಯುವುದಿಲ್ಲ ಎಂದು ಹೇಳಿದರು.
ಪರ್ರೀಕರ್ ಪತ್ರ ಬರೆದಿದ್ದಾರೆ: ನದಿ ನೀರು ಹಂಚಿಕೆ ಕುರಿತು ಕರ್ನಾಟಕ ಮತ್ತು ಗೋವಾ ನಡುವಿನ ವಿವಾದದ ವಿಚಾರಣೆಯನ್ನು ಮಹದಾಯಿ ಜಲ
ವಿವಾದ ನ್ಯಾಯಮಂಡಳಿ ನಡೆಸುತ್ತಿದೆ. ಕರ್ನಾಟಕಕ್ಕೆ ಮಾನವೀಯ ನೆಲೆಯಲ್ಲಿ ಕುಡಿಯುವ ನೀರು ಒದಗಿಸುವುದಾಗಿ ತಿಳಿಸಿರುವ ಗೋವಾದ ಮುಖ್ಯಮಂತ್ರಿ ಮನೋಹರ ಪರ್ರೀಕರ್, ಸಂಧಾನ ಮಾತುಕತೆಗೆ ಸಿದ್ಧ ಎಂದು ಹೇಳಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಅನಂತಕುಮಾರ್ ಸರ್ಕಾರದ ಪರ ಪ್ರತಿಕ್ರಿಯೆ ನೀಡಿದರು.
ಈ ಪ್ರತಿಕ್ರಿಯೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಸದಸ್ಯರು, ಗೋವಾ ಮುಖ್ಯಮಂತ್ರಿ ಕರ್ನಾಟಕದ ಮುಖ್ಯಮಂತ್ರಿಗೆ ಪತ್ರ ಬರೆಯುವ ಬದಲು ಮಾಜಿ ಮುಖ್ಯಮಂತ್ರಿಗೆ ಪತ್ರ ಬರೆದರೆ ಉಪಯೋಗವಿಲ್ಲ ಎಂದು ತಿಳಿಸಿದರು.
ಜಲವಿವಾದವು ನ್ಯಾಯಾಲಯದ ಹೊರಗೆ ಇತ್ಯರ್ಥಗೊಳ್ಳಬೇಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಧಾನ ಮಾತುಕತೆಗೆ ಮನವಿ ಸಲ್ಲಿಸಿ ಗೋವಾದ ಮುಖ್ಯಮಂತ್ರಿಗೆ ಅನೇಕ ಬಾರಿ ಪತ್ರ ಬರೆದರೂ ಪ್ರತಿಕ್ರಿಯೆ ನೀಡದೆ, ಮಾಜಿ ಮುಖ್ಯಮಂತ್ರಿಗೆ ಪತ್ರ ಬರೆದು ರಾಜಕೀಯ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಗುಂಪಿನ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು.
ಆಗ ಉತ್ತರಿಸಿದ ಅನಂತಕುಮಾರ್, ಪರ್ರೀಕರ್ ಅವರು ಉತ್ತರ ಕರ್ನಾಟಕದ ಜನತೆಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಮಹದಾಯಿ ನದಿಯ 7.56 ಟಿಎಂಸಿ ಅಡಿ ನೀರನ್ನು ನೀಡಲು ತಾತ್ವಿಕವಾಗಿ ಒಪ್ಪಿಗೆ ಸೂಚಿಸಿದ್ದು, ಕರ್ನಾಟಕದ ಮುಖ್ಯಮಂತ್ರಿಯವರು ಅವರೊಂದಿಗೆ ಸಂಧಾನಕ್ಕೆ ಮುಂದಾಗಬೇಕು ಎಂದು ಹೇಳಿದರು.
ಈ ಉತ್ತರಕ್ಕೆ ತೃಪ್ತರಾಗದ ಖರ್ಗೆ ಹಾಗೂ ಸಿಂಧಿಯಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಕಾಂಗ್ರೆಸ್ನ ಚಿತ್ರದುರ್ಗ ಸದಸ್ಯ ಬಿ.ಎನ್.ಚಂದ್ರಪ್ಪ ಅವರೂ ದನಿಗೂಡಿಸಿದರು.
ಅಗತ್ಯವಿದ್ದರೆ ಪ್ರಧಾನಿ ಬಳಿ ಸರ್ವ ಪಕ್ಷಗಳ ನಿಯೋಗ: ಸಿದ್ದರಾಮಯ್ಯ
ಬೆಂಗಳೂರು: ಮಹದಾಯಿ ನದಿ ನೀರಿನ ವಿವಾದ ಇತ್ಯರ್ಥಕ್ಕೆ ಸಂಬಂಧಿಸಿದಂತೆ ಅಗತ್ಯವಿದ್ದರೆ ಪ್ರಧಾನಿ ಬಳಿಗೆ ಸರ್ವ ಪಕ್ಷಗಳ ನಿಯೋಗ ಒಯ್ಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಇದಕ್ಕಾಗಿ ಮತ್ತೊಮ್ಮೆ ಸರ್ವಪಕ್ಷಗಳ ಸಭೆ ಕರೆಯಲು ಸಿದ್ಧ. ಸಭೆಯಲ್ಲಿ ಎಲ್ಲರೂ ಅಭಿಪ್ರಾಯ ಮಂಡಿಸಬಹುದು ಎಂದು ಮಂಗಳವಾರ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.
* ಮಹದಾಯಿ ನದಿ ನೀರಿನ ವಿವಾದವನ್ನು ಕಾಂಗ್ರೆಸ್ ಜೀವಂತವಾಗಿಡಲು ಯತ್ನಿಸುತ್ತಿದೆ
–ಜಗದೀಶ ಶೆಟ್ಟರ್, ವಿಧಾನಸಭೆ ವಿರೋಧ ಪಕ್ಷದ ನಾಯಕ
ಮುಖ್ಯಾಂಶಗಳು
* ಶೂನ್ಯವೇಳೆಯಲ್ಲಿ ಮುದ್ದ ಹನುಮೇಗೌಡ ಪ್ರಸ್ತಾಪ
* ಪರ್ರೀಕರ್ ಪತ್ರ ಬರೆದಿದ್ದಾರೆ ಎಂದ ಕೇಂದ್ರ ಸಚಿವ ಅನಂತಕುಮಾರ್
* ಗೋವಾದಿಂದ ರಾಜಕೀಯ: ಖರ್ಗೆ ಆರೋಪ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.