ದಾವಣಗೆರೆ: ಪ್ರತ್ಯೇಕ ಧರ್ಮ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಸ್ವಾರ್ಥ ರಾಜಕಾರಣ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದ ರೇಣುಕಾಮಂದಿರದಲ್ಲಿ ಬುಧವಾರ ಮಾತನಾಡಿದ ಅವರು 'ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರವಾಗಿ ಬಿಜೆಪಿಯ ಶಾಸಕರ ಬೆಂಬಲ ಇದೆ ಎಂದು ಹೊರಟ್ಟಿ ಗೊಂದಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಪ್ರತ್ಯೇಕ ಧರ್ಮ ವಿಚಾರವಾಗಿ ಅಖಿಲ ಭಾರತ ವೀರಶೈವ ಮಹಾಸಭಾ ಹಾಗೂ ಸಿದ್ಧಗಂಗಾ ಶ್ರೀಗಳ ನಿಲುವಿಗೆ ಬದ್ಧವಾಗಿರುವುದಾಗಿ' ತಿಳಿಸಿದರು.
ಸಮಾಜ ಒಡೆಯುವ, ಜಾತಿ ಒಡೆಯುವ ಕೆಲಸ ಕಾಂಗ್ರೆಸ್ ಪಕ್ಷದ್ದು. ಪ್ರತ್ಯೇಕ ಧರ್ಮದ ವಿಚಾರದಲ್ಲಿ ಬಿಜೆಪಿ ಶಾಸಕರು ಒಗ್ಗಟ್ಟಾಗಿದ್ದಾರೆ. ಹೊರಟ್ಟಿ ಅನಗತ್ಯವಾಗಿ ಗೊಂದಲ ಮೂಡಿಸಬಾರದು ಎಂದರು.
ಸ್ವಾಮೀಜಿಗಳ ಸಭೆ:
ಲಿಂಗಾಯತ ಸ್ವತಂತ್ರ ಧರ್ಮ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರು ಬೆಳಗಾವಿಯ ರುದ್ರಾಕ್ಷಿ ಮಠದಲ್ಲಿ ಬಹಿರಂಗ ಚರ್ಚೆಗೆ ದಿನಾಂಕ ನಿಗದಿಗೊಳಿಸಿದ್ದಾರೆ. ಈ ಸಭೆಯಲ್ಲಿ ಭಾಗವಹಿಸಬೇಕೆ ಬೇಡವೇ ಎಂಬ ಬಗ್ಗೆ ಹಲವು ಮಠಾಧೀಶರ ನೇತೃತ್ವದಲ್ಲಿ ಸಭೆ ನಡೆಯಿತು.
ರಂಭಾಪುರಿ ಪೀಠದ ಪ್ರಸನ್ನ ರೇಣುಕ ವೀರಸೋಮೇಶ್ವರ ಸ್ವಾಮೀಜಿ, ಶ್ರೀಶೈಲ ಮಠದ ಚನ್ನಸಿದ್ಧರಾಮ ಪಂಡಿತಾರಾಧ್ಯ ಸ್ವಾಮೀಜಿ, ಬಾಲೆಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ ಸೇರಿ ಪ್ರಮುಖ ಮಠಾಧೀಶರು ಸಭೆಯಲ್ಲಿ ಭಾಗವಹಿಸಿದ್ದರು.