ನೆಲಮಂಗಲ: ‘ಅಭ್ಯರ್ಥಿಗಳನ್ನು ಹಾಕುವುದಕ್ಕೇ ಜೆಡಿಎಸ್ ತಿಣುಕಾಡುತ್ತಿದೆ. ಜನರ ಉದ್ಧಾರ ಮಾಡ್ತೀವಿ ಅಂಥ ಬೊಗಳೆ ಬಿಡುತ್ತಿದ್ದಾರೆ. ಅವರ ಮಾತಿಗೆ ಜನ ಮರುಳಾಗಬಾರದು’ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಹೇಳಿದರು.
ಇಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.
‘ಬಿಜೆಪಿಯವರು ಸುಳ್ಳು ಹೇಳಿಕೊಂಡು ಕೇಂದ್ರದಲ್ಲಿ ಆಡಳಿತ ನಡೆಸುತ್ತಿದ್ದಾರೆ. ನಮ್ಮ ಸರ್ಕಾರದ ಕಾರ್ಯಕ್ರಮಗಳೇ ನಮ್ಮ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುತ್ತವೆ. ಯಾರಿಗೆ ಟಿಕೆಟ್ ನೀಡಿದರೂ ಅವರು ಗೆಲ್ಲುತ್ತಾರೆ ಎಂಬ ವಿಶ್ವಾಸವಿದೆ’ ಎಂದರು.
ಇಂಧನ ಸಚಿವ ಡಿ.ಕೆ.ಶಿವಕುಮಾರ್, ‘ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ₹12 ಸಾವಿರ ಕೋಟಿಯ ಎತ್ತಿನ ಹೊಳೆ ಯೋಜನೆಯನ್ನು ನಿಲ್ಲಿಸುತ್ತೇನೆ ಎಂದು ಕುಮಾರಸ್ವಾಮಿ ಹೇಳುತ್ತಾರೆ. ಇದು ರೈತರ ಬಗೆಗಿನ ಅವರ ಅಸಡ್ಡೆಯನ್ನು ತೋರಿಸುತ್ತದೆ’ ಎಂದು ಟೀಕಿಸಿದರು.
ಸಾರಿಗೆ ಸಚಿವ ಎಚ್.ಎಂ.ರೇವಣ್ಣ, ‘₹16 ಕೋಟಿ ವೆಚ್ಚದಲ್ಲಿ ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿಯ ಆಧುನಿಕ ಬಸ್ ನಿಲ್ದಾಣವನ್ನು ತಾಲ್ಲೂಕಿಗೆ ಮಂಜೂರು ಮಾಡಿದ್ದೇವೆ. ಶೀಘ್ರದಲ್ಲೆ ಶಂಕುಸ್ಥಾಪನೆ ನೆರವೇರಲಿದೆ’ ಎಂದರು.