ಕಲಬುರ್ಗಿ: ‘ಭೋವಿ ಸಮಾಜ ಅಭಿವೃದ್ಧಿ ನಿಗಮಕ್ಕೆ ಸರ್ಕಾರದಿಂದ ಹೆಚ್ಚಿನ ಅನುದಾನ ಬಿಡುಗಡೆ ಮಾಡಲು ಸಂಬಂಧಿಸಿದ ಸಚಿವರೊಂದಿಗೆ ಚರ್ಚಿಸಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು.
ಇಲ್ಲಿನ ಡಾ. ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಸೋಮವಾರ ಏರ್ಪಡಿಸಿದ್ದ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು.
‘ಮಾನವ ಕುಲಕ್ಕೆ ಮಾರ್ಗದರ್ಶನ ಮಾಡಿದ ಶರಣರು, ಸಂತರ ಜಯಂತಿಯನ್ನು ಸರ್ಕಾರದಿಂದ ಆಚರಿಸಲಾಗುತ್ತಿದೆ. ಕುಲಕ್ಕೊಬ್ಬ ಶರಣರನ್ನು ಗುರುತಿಸಿ ಎಲ್ಲ ಸಮಾಜದವರಲ್ಲಿ ಸ್ವಾಭಿಮಾನ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಸಿದ್ದರಾಮೇಶ್ವರರು ನಿಸ್ವಾರ್ಥ ಕಾಯಕ ಯೋಗಿಯಾಗಿದ್ದರು. ಆದ್ದರಿಂದ ಬಸವಣ್ಣನವರು ಅನುಭವ ಮಂಟಪದಲ್ಲಿ ಅವರಿಗೆ ಉನ್ನತ ಸ್ಥಾನ ನೀಡಿದ್ದರು’ ಎಂದು ಹೇಳಿದರು.
‘12ನೇ ಶತಮಾನದ ಬಸವಾದಿ ಶರಣರು ನುಡಿದಂತೆ ನಡೆದುಕೊಂಡಿದ್ದಾರೆ. ಸ್ವಾರ್ಥ ಬಿಡಲು ಬಸವಾದಿ ಶರಣರು ಹಲವಾರು ವಚನಗಳನ್ನು ರಚಿಸಿದ್ದಾರೆ. ನಾವು ಯಾವ ಕುಲದಲ್ಲಿ ಹುಟ್ಟಿದ್ದೇವೆ ಎನ್ನುವುದು ಮುಖ್ಯವಲ್ಲ. ಸಮಾಜಕ್ಕೆ ಹೇಗೆ ದಾರಿದೀಪವಾಗಿ ಬಾಳಿ ಬದುಕುತ್ತೇವೆ ಎಂಬುವುದು ಮುಖ್ಯ’ ಎಂದರು.
‘ಬಸವಾದಿ ಶರಣ ಸಾಹಿತ್ಯದಿಂದ ಮಾನವನಲ್ಲಿ ಬದಲಾವಣೆ ತರಲು ಸಾಧ್ಯವಾಗಿದೆ. ಇಂಥ ಸಾಹಿತ್ಯ, ವಚನಗಳ ಬಗ್ಗೆ ಮಕ್ಕಳಿಗೆ ತಿಳಿಸಬೇಕು. ವಚನಗಳಲ್ಲಿರುವ ಅರಿವನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಪ್ರೇರೇಪಿಸಬೇಕು’ ಎಂದು ಸಲಹೆ ನೀಡಿದರು.
ಚಿಗರಳ್ಳಿ ಮರುಳಶಂಕರ ದೇವರ ಗುರುಪೀಠದ ಸಿದ್ದಬಸವ ಕಬೀರ ಸ್ವಾಮೀಜಿ ಮಾತನಾಡಿ, ‘ಸಿದ್ದರಾಮೇಶ್ವರರು ಕೆರೆ ಕಟ್ಟಿಸುವುದು, ಮದುವೆ ಮಾಡಿಸುವಂತಹ ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು’ ಎಂದರು.
ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಮಾತನಾಡಿ, ‘ಸಿದ್ದರಾಮೇಶ್ವರರು ತಮ್ಮ ಕಾಲದಲ್ಲಿ ಹಲವಾರು ಕೆರೆಗಳನ್ನು ಕಟ್ಟಿಸಿದ್ದಾರೆ. ಭೋವಿ ಸಮಾಜದ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ನೆರವು ನೀಡಬೇಕು’ ಎಂದು ಮನವಿ ಮಾಡಿದರು.
ಶ್ರೀಶೈಲ ಸಾರಂಗ ಮಠದ ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ, ಶಾಸಕರಾದ ಕೆ.ಬಿ. ಶಾಣಪ್ಪ, ಬಿ.ಜಿ. ಪಾಟೀಲ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಮಲಾಜಿ, ಕರ್ನಾಟಕ ತೊಗರಿ ಮಂಡಳಿ ಅಧ್ಯಕ್ಷ ಭಾಗಣಗೌಡ ಪಾಟೀಲ ಸಂಕನೂರ, ಮೇಯರ್ ಶರಣಕುಮಾರ ಮೋದಿ, ಜಿಲ್ಲಾ ಭೋವಿ (ವಡ್ಡರ) ಸಮಾಜದ ಅಧ್ಯಕ್ಷ ಮಲ್ಲಿಕಾರ್ಜುನ ಬಿ.ಕುಸ್ತಿ, ಮುಖಂಡರಾದ ಸುನಿಲ್ ವಲ್ಯಾಪುರೆ, ಅಲ್ಲಮಪ್ರಭು ಪಾಟೀಲ, ಆರ್.ಎಸ್. ಪಾಟೀಲ, ವೀರಣ್ಣ ಹೊನ್ನಳ್ಳಿ, ಅನಿಲ್ ಜಾಧವ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.