ಹೊಸಪೇಟೆ: ‘ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಜತೆ ಹೋಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು ನಿಜ. ಆಗಾಗ್ಗೆ ಭೇಟಿ ಮಾಡುತ್ತಿರುತ್ತೇನೆ. ಆದರೆ, ರಾಜಕೀಯ ಕಾರಣಗಳಿಗಾಗಿ ಎಂದೂ ಭೇಟಿ ಮಾಡಿಲ್ಲ’ ಎಂದು ಬಿಜೆಪಿ ಶಾಸಕ ಆನಂದ ಸಿಂಗ್ ಶುಕ್ರವಾರ ಇಲ್ಲಿ ಸ್ಪಷ್ಟಪಡಿಸಿದರು.
‘ಕ್ಷೇತ್ರದ ಅಭಿವೃದ್ಧಿ, ಏತ ನೀರಾವರಿ ಯೋಜನೆ ಕುರಿತು ಚರ್ಚಿಸಲು ಭೇಟಿ ಮಾಡಿದ್ದೆ. ಈ ಚಿತ್ರ ‘ಪ್ರಜಾವಾಣಿ’ಯಲ್ಲಿ ಬಂದಿದೆ. ಆದರೆ, ಅದಕ್ಕೆ ಅನ್ಯ ಅರ್ಥ ಕಲ್ಪಿಸುವ ಅಗತ್ಯ ಇಲ್ಲ’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.
‘ಸ್ಥಳೀಯ ಬಿಜೆಪಿ ಮುಖಂಡರ ಬಗ್ಗೆ ಅಸಮಾಧಾನ ಇರುವುದು ನಿಜ. ಆ ಕಾರಣಕ್ಕಾಗಿಯೇ ಬಿಜೆಪಿ ಪರಿವರ್ತನಾ ಯಾತ್ರೆಗೆ ಹೋಗಿರಲಿಲ್ಲ. ಅದನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಸಂಸದ ಬಿ. ಶ್ರೀರಾಮುಲು ಗಮನಕ್ಕೆ ತಂದಿದ್ದೇನೆ. ಬಗೆಹರಿಸುವ ಭರವಸೆಯನ್ನು ಅವರು ನೀಡಿದ್ದಾರೆ’ ಎಂದು ಹೇಳಿದರು.
ಸಭೆ ಮುಂದಕ್ಕೆ: ಮುಂದಿನ ನಡೆ ಕುರಿತು ಚರ್ಚಿಸಲು ಆನಂದ ಸಿಂಗ್ ಶುಕ್ರವಾರ ಕರೆದಿದ್ದ ಬೆಂಬಲಿಗರ ಸಭೆಯನ್ನು ಶನಿವಾರಕ್ಕೆ ಮುಂದೂಡಲಾಗಿದೆ. ‘ಸಭೆಯಲ್ಲಿ ಎಲ್ಲರ ಅಭಿಪ್ರಾಯ ಪಡೆದ ನಂತರ ಶಾಸಕರು ಮುಂದಿನ ನಡೆ ಏನೆಂಬುದನ್ನು ತಿಳಿಸುತ್ತಾರೆ’ ಎಂದು ಬಿಜೆಪಿ ತಾಲ್ಲೂಕು ಅಧ್ಯಕ್ಷ ಸಂದೀಪ್ ಸಿಂಗ್ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.