ಬೆಂಗಳೂರು: ಪ್ರಸ್ತುತ ₹50 ಲಕ್ಷ ಮೊತ್ತದವರೆಗಿನ ಕಾಮಗಾರಿಗಳ ಗುತ್ತಿಗೆ ನೀಡುವಾಗ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ನೀಡಲಾಗುತ್ತಿದೆ. ಇನ್ನು ₹1 ಕೋಟಿ ಮೊತ್ತದವರೆಗಿನ ಕಾಮಗಾರಿಗಳಲ್ಲೂ ಮೀಸಲಾತಿ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕರ್ನಾಟಕ ನಾಯಕ ಜನಾಂಗದ ಕ್ಷೇಮಾಭಿವೃದ್ಧಿ ಸಂಘವು ಚಾಮ ರಾಜಪೇಟೆಯಲ್ಲಿ ನಿರ್ಮಿಸಿರುವ ಮಹರ್ಷಿ ವಾಲ್ಮೀಕಿ ಭವನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹಿಂದುಳಿದ ಸಮುದಾಯಗಳಿಗೆ ಆರ್ಥಿಕ ಶಕ್ತಿ ಸಿಗದಿದ್ದರೆ ಮುಖ್ಯವಾಹಿನಿಗೆ ಬರಲು ಸಾಧ್ಯವಿಲ್ಲ. ಸಣ್ಣ ಸಮುದಾಯಗಳ ಜನರು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು. ಉದ್ಯಮಗಳನ್ನು ಸ್ಥಾಪಿಸಬೇಕು ಎಂದರು.
‘ಶಿಕ್ಷಣ ಹಾಗೂ ಉದ್ಯೋಗದಲ್ಲಿ ಪರಿಶಿಷ್ಟ ಪಂಗಡದವರಿಗೆ ನೀಡಿರುವ ಮೀಸಲಾತಿ ಪ್ರಮಾಣವನ್ನು ಶೇ 3ರಿಂದ ಶೇ 7ಕ್ಕೆ ಹೆಚ್ಚಿಸಬೇಕು ಎಂಬ ಬೇಡಿಕೆ ಬಗ್ಗೆಯೂ ಪರಿಶೀಲಿಸುತ್ತೇನೆ’ ಎಂದರು.
ಪ್ರಸ್ತುತ ಕಾಮಗಾರಿಗಳನ್ನು ಗುತ್ತಿಗೆ ನೀಡುವಾಗ ಪರಿಶಿಷ್ಟ ಜಾತಿಯವರಿಗೆ ಶೇ 17.15 ಹಾಗೂ ಪರಿಶಿಷ್ಟ ಪಂಗಡದವರಿಗೆ ಶೇ 6.95ರಷ್ಟು ಮೀಸಲಾತಿ ನೀಡಲಾಗುತ್ತಿದೆ.