ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂತೋಷ್ ಹತ್ಯೆ ತನಿಖೆ ಎನ್‌ಐಎಗೆ ವಹಿಸಿ

Last Updated 3 ಫೆಬ್ರುವರಿ 2018, 6:14 IST
ಅಕ್ಷರ ಗಾತ್ರ

ಬಾಗಲಕೋಟೆ: ರಾಜ್ಯದಲ್ಲಿ ನಿರಂತರವಾಗಿ ಬಿಜೆಪಿ ಹಾಗೂ ಸಂಘ ಪರಿವಾರದ ಕಾರ್ಯಕರ್ತರ ಹತ್ಯೆ ನಡೆಯುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಶುಕ್ರವಾರ ಇಲ್ಲಿ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಎರಡು ದಿನಗಳ ಹಿಂದೆ ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ಸಂತೋಷ್ ಕೊಲೆಯಾಗಿದೆ. ಇದೊಂದು ರಾಜಕೀಯ ಹತ್ಯೆಯಾಗಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸುವಂತೆ ಆಗ್ರಹಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಅವರಿಗೆ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಕಾಲೇಜು ವಿದ್ಯಾರ್ಥಿನಿಯರ ಕೊಲೆ, ಅತ್ಯಾಚಾರ ನಡೆಯುತ್ತಿದೆ. ಇನ್ನೊಂದೆಡೆ ಬಿಜೆಪಿ, ಆರ್‌.ಎಸ್‌.ಎಸ್‌ ಕಾರ್ಯಕರ್ತರ ಕಗ್ಗೊಲೆ ಆಗುತ್ತಿದೆ. ಶಾಂತಿ, ನೆಮ್ಮದಿಗೆ ಹೆಸರಾಗಿದ್ದ ಕರ್ನಾಟಕ ಇದೀಗ ರಕ್ತಪಾತದ ನೆಲೆಯಾಗಿದೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವೈಫಲ್ಯವೇ ಕಾರಣ ಎಂದು ಆರೋಪಿಸಿದರು. ಇದೇ ಪರಿಸ್ಥಿತಿ ಮುಂದುವರಿದರೆ ಹಿಂದೂಗಳ ಸಹನೆಯ ಕಟ್ಟೆಯೊಡೆಯಲಿದೆ ಎಂದು ಎಚ್ಚರಿಸಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ನಾರಾಯಣಸಾ ಭಾಂಡಗೆ ಮಾತನಾಡಿ, ರಾಜ್ಯ ಸರ್ಕಾರ ಸಾಮಾನ್ಯ ಜನರ ಜೀವಗಳೊಂದಿಗೆ ಚಲ್ಲಾಟವಾಡುತ್ತಿದೆ ಎಂದರು. ಬಿಜೆಪಿ ಯುವ ಮೋರ್ಚಾದ ಮುಖಂಡ ಬಸವರಾಜ ಯಂಕಂಚಿ ಮಾತನಾಡಿ, ರಾಜ್ಯ ಸರ್ಕಾರ ಹಿಂದು ಮುಸ್ಲಿಮರ ನಡುವೆ ತಾರತಮ್ಯ ಮಾಡುತ್ತಿದೆ ಎಂದರು.

ಪಕ್ಷದ ನಗರ ಘಟಕದ ಅಧ್ಯಕ್ಷ ರಾಜು ನಾಯ್ಕರ ಮಾತನಾಡಿ, ರಾಜ್ಯದಲ್ಲಿ ಹಿಂದೂಗಳನ್ನು ವ್ಯವಸ್ಥಿತವಾಗಿ ಸಂಚು ರೂಪಿಸಿ ಹತ್ಯೆ ಮಾಡಲಾಗುತ್ತಿದೆ.
ಅದಕ್ಕೆ ಸರ್ಕಾರ ಬೆಂಬಲ ನೀಡುತ್ತಿದೆ ಎಂದರು. ರಾಜು ರೇವಣಕರ ಮಾತನಾಡಿದರು.

ಪ್ರತಿಭಟನೆಯಲ್ಲಿ ನಗರಸಭೆ ಅಧ್ಯಕ್ಷ ದ್ಯಾವಪ್ಪ ರಾಕುಂಪಿ, ನಗರಸಭೆ ಸದಸ್ಯರಾದ ಸುರೇಶ ಕುದರಿಕಾರ, ಸದಾನಂದ ನಾರಾ, ರಾಜೇಂದ್ರ ಬಳೂಲಮಠ, ಬಸವರಾಜ ನಾಶಿ, ಸಂಗಪ್ಪ ಹಿತ್ತಲಮನಿ, ರವಿ ಧಾಮಜಿ, ಬಸವರಾಜ ಅವರಾದಿ, ಮಹಿಳಾ ಘಟಕದ ಅಧ್ಯಕ್ಷೆ ಸವಿತಾ ಲೆಂಕೆಣ್ಣವರ, ರಾಜ್ಯ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಕಲಾವತಿ ರಾಜೂರ, ಶೈಲಾ ಅಂಕಲಗಿ, ಜ್ಯೋತಿ ಭಜಂತ್ರಿ. ಅನಿತಾ ಸರೋದೆ ಮತ್ತಿತರರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT