ಹೊಸದುರ್ಗ: ರೈತರ ಹಾಗೂ ಮಹಿಳಾ ಸ್ವಸಹಾಯ ಸಂಘಗಳ ಸಬಲೀಕರಣಕ್ಕೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಶಾಸಕ ಬಿ.ಜಿ.ಗೋವಿಂದಪ್ಪ ಹೇಳಿದರು.
ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಹಾಗೂ ತಾಲ್ಲೂಕು ಕೃಷಿ ಪತ್ತಿನ ಸಹಕಾರ ಸಂಘದ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಅಶೋಕ ರಂಗ ಮಂದಿರದಲ್ಲಿ ಶನಿವಾರ ನಡೆದ ರೈತರಿಗೆ ಮತ್ತು ಮಹಿಳಾ ಸ್ವಸಹಾಯ ಸಂಘದ ಸಾಲಸೌಲಭ್ಯ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.
ರಾಜ್ಯ ಸರ್ಕಾರ ₹ 50 ಸಾವಿರದ ವರೆಗಿನ ಕೃಷಿ ಸಾಲಮನ್ನಾ ಮಾಡಿದ ನಂತರವೂ ತಾಲ್ಲೂಕಿನ 1,112 ಮಂದಿ ರೈತರಿಗೆ ₹ 4.65 ಕೋಟಿ ಕೃಷಿಗೆ ಹಾಗೂ 164 ಮಹಿಳಾ ಸ್ವಸಹಾಯ ಸಂಘಗಳಿಗೆ ₹ 2.17 ಕೋಟಿ ಸಾಲಸೌಲಭ್ಯವನ್ನು ಶೂನ್ಯ ಬಡ್ಡಿ ದರದಲ್ಲಿ ನೀಡಿದೆ. ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಸಾವಿರಾರು ಕೋಟಿ ಅನುದಾನ ತರಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಡಿಸಿಸಿ ಬ್ಯಾಂಕ್ ನಿರ್ದೇಶಕ ಎಚ್.ಬಿ.ಮಂಜುನಾಥ್ ಮಾತನಾಡಿ, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಮತ್ತು ಕೃಷಿ ಪತ್ತಿನ ಸಹಕಾರ ಸಂಘವು ರೈತರನ್ನು ಹಾಗೂ ಸ್ವಸಹಾಯ ಸಂಘಗಳನ್ನು ಸದೃಢಗೊಳಿಸಲು ಶ್ರಮಿಸುತ್ತಿವೆ. ಕೃಷಿ ಅಭಿವೃದ್ಧಿಗೆ ₹ 10 ಲಕ್ಷದ ವರೆಗೂ ಕೇವಲ ₹ 3ರ ಬಡ್ಡಿ ದರದಲ್ಲಿ ಸಾಲಸೌಲಭ್ಯ ನೀಡಲಾಗುತ್ತಿದೆ. ಈ ಸೌಲಭ್ಯವನ್ನು ರೈತರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಮುಖ್ಯವ್ಯವಸ್ಥಾಪಕ ಇಲಿಯಾಜುಲ್ಲಾ ಷರೀಫ್, ಸಂಪನ್ಮೂಲ ವ್ಯಕ್ತಿ ಬಸವರಾಜು ಮಾತನಾಡಿದರು.
ಜಿಲ್ಲಾ ಪಂಚಾಯ್ತಿ ಸದಸ್ಯ ಕೆ.ಅನಂತ್, ಜಿ.ಟಿ.ಅಜ್ಜಪ್ಪ, ಚೇತನಾ ಪ್ರಸಾದ್, ವಿಶಾಲಾಕ್ಷಿ ನಟರಾಜು, ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮದ್ ಇಸ್ಮಾಯಿಲ್, ಮಾಧ್ಯಮ ವಕ್ತಾರ ಅಲ್ತಾಫ್ ಪಾಷಾ, ಮುಖಂಡರಾದ ಆಗ್ರೋ ಶಿವಣ್ಣ, ಡಾ.ಎಂ.ಎಚ್.ಕೃಷ್ಣಮೂರ್ತಿ, ರಾಜಣ್ಣ ಹಾಜರಿದ್ದರು.