ಹನುಮಸಾಗರ: ಬಹು ದಿನಗಳಿಂದ ಕುಡಿಯುವ ನೀರಿಗಾಗಿ ತತ್ತರಿಸಿದ್ದ ಸಮೀಪದ ಮಾಲಗಿತ್ತಿ ಗ್ರಾಮದ ಮಹಿಳೆಯರು ಶನಿವಾರ ಖಾಲಿ ಕೊಡಗಳೊಂದಿಗೆ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಗ್ರಾಮದಲ್ಲಿ ಕೊಳವೆ ಬಾವಿಗಳಿಲ್ಲ, ಮೆಲ್ತೊಟ್ಟೆಗೆ ಸರಿಯಾಗಿ ನೀರು ಪೂರೈಕೆಯಾಗುತ್ತಿಲ್ಲ, ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಿ ಎಂದು ಗ್ರಾಮ ಪಂಚಾಯಿತಿಗೆ ಹಲವಾರು ಬಾರಿ ಮನವಿ ಮಾಡಿದರೂ ಪಂಚಾಯಿತಿ ಸಿಬ್ಬಂದಿ ಸ್ಪಂದಿಸುತ್ತಿಲ್ಲ ಎಂದು ಮಹಿಳೆಯರು ದೂರಿದರು.
ಗ್ರಾಮ ಪಂಚಾಯಿತಿ ಸದಸ್ಯರು ಕೆಲ ದಿನಗಳಲ್ಲಿ ಸಮರ್ಪಕವಾಗಿ ನೀರಿನ ವ್ಯವಸ್ಥೆ ಮಾಡಲಾಗುತ್ತದೆ, ತೀವ್ರ ಅವಶ್ಯಕತೆ ಇದ್ದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸುವುದಾಗಿ ಭರವಸೆ ನೀಡಿದ ಬಳಿಕ ಮಹಿಳೆಯರು ಧರಣಿಯನ್ನು ಹಿಂಪಡೆದರು. ವಿವಿಧ ಸಂಘ ಸಂಸ್ಥೆಗಳ ಮಹಿಳೆಯರು, ಯುವಕರು ಧರಣಿಯಲ್ಲಿ ಪಾಲ್ಗೊಂಡಿದ್ದರು.