ಬೆಂಗಳೂರು: ರಾಜ್ಯದಲ್ಲಿ ಇದುವರೆಗೆ 363 ಅಕ್ರಮ ವಲಸಿಗರನ್ನು ಪತ್ತೆ ಹಚ್ಚಲಾಗಿದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ವಿಧಾನಪರಿಷತ್ನಲ್ಲಿ ಗುರುವಾರ ಜೆಡಿಎಸ್ನ ಟಿ.ಎ.ಶರವಣ ಪ್ರಶ್ನೆಗೆ ಅವರು ಉತ್ತರ ನೀಡಿದರು.
ಬೆಳಗಾವಿ ಮಹಾನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ 12 ಬಾಂಗ್ಲಾ ವಲಸಿಗರನ್ನು ಬಾಂಗ್ಲಾ ಪೊಲೀಸರ ವಶಕ್ಕೆ ಒಪ್ಪಿಸಿದ್ದೇವೆ ಎಂದು ತಿಳಿಸಿದರು.
ಉತ್ತರ ಒಪ್ಪದ ಶರವಣ, ‘ಮಲೆನಾಡಿನಲ್ಲಿ ಸುಮಾರು 70,000, ಬೆಂಗಳೂರಿನಲ್ಲಿ 40,000 ಕ್ಕೂ ಅಕ್ರಮ ವಲಸಿಗರು ಇರುವ ಮಾಹಿತಿ ಇದೆ. ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ತಲಾ ಒಬ್ಬರು ಅಕ್ರಮ ವಲಸಿಗರಿದ್ದಾರೆ ಎನ್ನುವ ಮಾಹಿತಿ ಕೊಟ್ಟಿದ್ದೀರಿ. ಇದನ್ನು ಮತ್ತೊಮ್ಮೆ ಪರಿಶೀಲಿಸಬೇಕು’ ಎಂದು ಒತ್ತಾಯಿಸಿದರು.
ಇದಕ್ಕೆ ಧ್ವನಿಗೂಡಿಸಿದ ಬಿಜೆಪಿಯ ಎಂ.ಕೆ.ಪ್ರಾಣೇಶ್, ‘ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಾಂಗ್ಲಾ ಅಕ್ರಮ ವಲಸಿಗರಿಗೆ ಆಧಾರ್ ನೋಂದಣಿ ಮತ್ತು ಮತದಾರರ ಪಟ್ಟಿಗೆ ಸೇರಿಸುವ ಪ್ರಯತ್ನ ನಡೆಯುತ್ತಿವೆ. ಗೃಹ ಇಲಾಖೆ ಗಮನ ಹರಿಸಬೇಕು’ ಎಂದು ಆಗ್ರಹಿಸಿದರು.
ಮಲೆನಾಡು ಪ್ರದೇಶಗಳಲ್ಲಿ ಕೂಲಿ ಕಾರ್ಮಿಕರಾಗಿ ಅಕ್ರಮ ವಲಸಿಗರು ಬಂದಿರುವ ಬಗ್ಗೆ ಪ್ರಕರಣಗಳು ವರದಿಯಾಗಿಲ್ಲ. ವಲಸಿಗರ ಆಧಾರ್ ಮತ್ತು ಮತದಾರರ ಗುರುತಿನ ಚೀಟಿಗಳನ್ನು ಮತ್ತೊಮ್ಮೆ ಪರಿಶೀಲಿಸುತ್ತೇವೆ ಎಂದು ಸಚಿವ ತಿಳಿಸಿದರು.