ದೇವನಹಳ್ಳಿ: ಬೆಂಗಳೂರು ಸಿಗ್ನೇಚರ್ ಬ್ಯುಸಿನೆಸ್ ಪಾರ್ಕ್ ಮತ್ತು ಅಂತರರಾಷ್ಟ್ರೀಯ ಸಮಾವೇಶ ಕೇಂದ್ರ ಕೆಲವೇ ವರ್ಷಗಳಲ್ಲಿ ವಿಶ್ವಕ್ಕೆ ಮಾದರಿಯಾಗಲಿದೆ ಎಂದು ಕೈಗಾರಿಕಾ ಸಚಿವ ಆರ್.ವಿ.ದೇಶಪಾಂಡೆ ಅಭಿಪ್ರಾಯಪಟ್ಟರು.
ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಪಕ್ಕದ ಭುವನಹಳ್ಳಿ ಗ್ರಾಮದ ಬಳಿ ಗುರುವಾರ ಅಂತರರಾಷ್ಟ್ರೀಯ ಸಮಾವೇಶ ಕೇಂದ್ರ ಮತ್ತು ಸಿಗ್ನೇಚರ್ ಬ್ಯುಸಿನೆಸ್ ಪಾರ್ಕ್ಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ₹1035 ಕೋಟಿ ಕಾಮಗಾರಿಗೆ ಚಾಲನೆ ನೀಡಲಾಯಿತು.
ವಿಮಾನ ನಿಲ್ದಾಣ ಪಕ್ಕದಲ್ಲೇ ಪಾರ್ಕ್ಗೆ 407 ಎಕರೆ ಭೂಮಿ ಮೀಸಲಿಡಲಾಗಿದೆ. ಅದೇ ಜಾಗದಲ್ಲಿ 35 ಎಕರೆ ವಿಸ್ತೀರ್ಣದ ಬೆಂಗಳೂರು ಅಂತರರಾಷ್ಟ್ರೀಯ ಸಮಾವೇಶ ಕೇಂದ್ರ ಸ್ಥಾಪಿಸಲಾಗುವುದು ಎಂದು ತಿಳಿಸಿದರು.
ಸಮಾವೇಶ ಕೇಂದ್ರದಲ್ಲಿ 8 ಸಾವಿರ ಆಸನಗಳ ವ್ಯವಸ್ಥೆಯ ಸಭಾಂಗಣ ನಿರ್ಮಾಣ ಮಾಡಲಾಗುವುದು. 9 ಸಾವಿರ ಚದರ ಮೀಟರ್ ವಿಸ್ತೀರ್ಣದಲ್ಲಿ ಹವಾನಿಯಂತ್ರಣ ವ್ಯವಸ್ಥೆಯುಳ್ಳ ಸಭಾಂಗಣ ಸ್ಥಾಪನೆಯಾಗಲಿದೆ ಎಂದು ಹೇಳಿದರು.
ಸಂಸದ ವೀರಪ್ಪಮೊಯಿಲಿ ಮಾತನಾಡಿ, ವಿಮಾನ ನಿಲ್ದಾಣ ಪಕ್ಕದಲ್ಲೇ ಬಿಸಿನೆಸ್ ಪಾರ್ಕ್ ಮತ್ತು ಸಮಾವೇಶ ಕೇಂದ್ರ ನಿರ್ಮಾಣವಾಗುತ್ತಿರುವುದು ರಾಜ್ಯಕ್ಕೆ ಹೆಮ್ಮೆಯಾದರೂ ಅಂತರರಾಷ್ಟ್ರೀಯ ಹಣಕಾಸು ವಹಿವಾಟು ಕೇಂದ್ರವನ್ನಾಗಿಸಲು ಸಚಿವರು ಸಂಕಲ್ಪ ಮಾಡಬೇಕು ಎಂದು ಒತ್ತಾಯಿಸಿದರು.
ಕೈಗಾರಿಕಾ ಕ್ಷೇತ್ರ ಪ್ರಗತಿಯತ್ತ ಸಾಗುತ್ತಿದೆ. ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ರಾಜ್ಯ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ವಿದೇಶಿ ಮೂಲದ ಕಂಪನಿಯೊಂದು ತಾಲ್ಲೂಕಿನಲ್ಲಿ ಹಾರ್ಡ್ವೇರ್ ಪಾರ್ಕ್ ನಿರ್ಮಾಣಕ್ಕೆ ಮುಂದಾಗಿದೆ ಎಂದರು.
ಶಾಸಕ ಪಿಳ್ಳಮುನಿ ಶಾಮಪ್ಪ ಮಾತನಾಡಿ, ವಿಮಾನ ನಿಲ್ದಾಣ ವಶಪಡಿಸಿಕೊಂಡ ರೈತರ 5600 ಎಕರೆ ಭೂಮಿಯಲ್ಲಿ ಕೆಲ ರೈತರಿಗೆ ಇನ್ನೂ ಪರಿಹಾರ ಸಿಗದೆ ಅಲೆಯುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಕೆಎಸ್ಐಐಡಿಸಿ ಅಧ್ಯಕ್ಷ ಸಿ.ಎಂ. ಧನಂಜಯ, ವ್ಯವಸ್ಥಾಪಕ ನಿರ್ದೇಶಕ ಜಯರಾಮ್ ಇದ್ದರು.