ಹುಬ್ಬಳ್ಳಿ: ಈಶಾನ್ಯ ರಾಜ್ಯಗಳಲ್ಲಿ ನಡೆದ ಚುನಾವಣೆ ಫಲಿತಾಂಶ ರಾಜ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕವನ್ನು ಕಾಂಗ್ರೆಸ್ ಮುಕ್ತ ಮಾಡುವುದಾಗಿ ಬಿಜೆಪಿ ಯವರು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಆದರೆ, ಅವರ ಪಕ್ಷವೇ ಕರ್ನಾಟಕ ಮುಕ್ತವಾಗಲಿದೆ ಎಂದರು.
ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ಕಳಸಾ ಬಂಡೂರಿ ಹೋರಾಟಗಾರರು ತಮಗಾಗಿ ಕಾಯುತ್ತಿರುವುದು ರಾಹುಲ್ ಗಾಂಧಿ ಅವರಿಗೆ ಮಾಹಿತಿ ಇರಲಿಲ್ಲ. ಎಸ್ಪಿಜಿ ಅವರಿಗೆ ತಿಳಿಸುವ ಬದಲು ಹೋರಾಟಗಾರರು ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅಥವಾ ರಾಹುಲ್ ಅವರ ಆಪ್ತ ಕಾರ್ಯದರ್ಶಿಗಳಿಗೆ ತಿಳಿಸಬೇಕಿತ್ತು. ಈ ಹಂತದಲ್ಲಿ ಸಂವಹನದಲ್ಲಿ ಹೆಚ್ಚು ಕಡಿಮೆಯಾಗಿದೆ ಎಂದು ಹೇಳಿದರು.
ಇವಿಎಂ ಯಂತ್ರಗಳ ಬದಲು ಮತಪತ್ರಗಳನ್ನು ಬಳಸಿ ಚುನಾವಣೆ ನಡೆಸುವುದು ಒಳ್ಳೆಯದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಲಿಂಗಾಯತ ಪ್ರತ್ಯೇಕ ಧರ್ಮ: ವರದಿ ಪರಾಮರ್ಶಿಸಿ ಶಿಫಾರಸು
ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರ ಕುರಿತು ಸಮಿತಿ ನೀಡಿದ ವರದಿಯನ್ನು ಪರಾಮರ್ಶೆ ನಡೆಸಿ ಕೇಂದ್ರಕ್ಕೆ ಶಿಫಾರಸು ಮಾಡಲಾಗುವುದು ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.