ಪುತ್ತೂರು: ಕಾಲೇಜು ವಿದ್ಯಾರ್ಥಿಗಳಿಗೆ ಕೆಎಸ್ಆರ್ಟಿಸಿ ಉಚಿತ ಬಸ್ ಪಾಸ್ ವಿತರಿಸದ ರಾಜ್ಯ ಸರ್ಕಾರದ ವಿದ್ಯಾರ್ಥಿ ವಿರೋಧಿ ನೀತಿಯನ್ನು ವಿರೋಧಿಸಿ ಹಾಗೂ ಉಚಿತ ಬಸ್ ಪಾಸ್ ವ್ಯವಸ್ಥೆ ಮಾಡಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಇಲ್ಲಿಯ ವಿವೇಕಾನಂದ ಪದವಿ ಕಾಲೇಜಿನ ವಿದ್ಯಾರ್ಥಿಗಳು ಬುಧವಾರ ಬೃಹತ್ ಪ್ರತಿಭಟನೆ ನಡೆಸಿದರು.
ಬೆಳಿಗ್ಗೆ ತರಗತಿಗಳನ್ನು ಬಹಿಷ್ಕರಿಸಿ ಕಾಲೆಝು ಸಮೀಪದ ವಿವೇಕಾನಂದ ಪ್ರತಿಮೆಯ ಬಳಿ ಜಮಾಯಿಸಿದ ವಿದ್ಯಾರ್ಥಿಗಳು ಉಚಿತ ಬಸ್ ಪಾಸ್ ನೀಡುವ ಭರವಸೆಯನ್ನು ಈಡೇರಿಸದ ರಾಜ್ಯ ಸರ್ಕಾರದ ವಿದ್ಯಾರ್ಥಿ ವಿರೋಧಿ ನೀತಿಯ ವಿರುದ್ಧ ಘೋಷಣೆ ಕೂಗಿದರು.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮುಖಂಡ ಸಂದೇಶ್ ಮಾತನಾಡಿ, ‘ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವ್ಯವಸ್ಥೆ ಮಾಡುವ ಭರವಸೆ ನೀಡಿದ್ದ ರಾಜ್ಯ ಸರ್ಕಾರ ಇದೀಗ ವಚನ ಭ್ರಷ್ಟವಾಗಿದೆ. ಮುಂಗಡ ಪತ್ರದಲ್ಲೂ ವಿದ್ಯಾರ್ಥಿಗಳಿಗೆ ಉಚಿತ ಬಸ್ಪಾಸ್ ನೀಡುವ ಕುರಿತು ಯಾವುದೇ ಪ್ರಸ್ತಾವನೆ ಮಾಡಲಾಗಿಲ್ಲ. ವಾಮಮಾರ್ಗದ ಮೂಲಕ ಅಧಿಕಾರಕ್ಕೆ ಬಂದಿರುವ ಸರ್ಕಾರ ಅನಗತ್ಯವಾಗಿ ಕೋಟಿಗಟ್ಟಲೆ ಹಣ ವ್ಯಯಿಸುತ್ತಿದ್ದರೂ ವಿದ್ಯಾರ್ಥಿಗಳ ನ್ಯಾಯಯುತ ಉಚಿತ ಬಸ್ಪಾಸ್ ಬೇಡಿಕೆಯನ್ನು ಈಡೇರಿಸುತ್ತಿಲ್ಲ ಎಂದರು. ವಿದ್ಯಾರ್ಥಿಗಳು ಪಾಸ್ ಪಡೆಯಲು ಪಾವತಿಸಿದ ಹಣವನ್ನು ಸರ್ಕಾರ ಮರು ಪಾವತಿಸದಿದ್ದರೆ ಇನ್ನಷ್ಟು ತೀವ್ರ ಹೋರಾಟ ನಡೆಸುತ್ತೇವೆ’ ಎಂದು ಎಚ್ಚರಿಸಿದರು.
ಪರಿಷತ್ ಕಾರ್ಯಕರ್ತೆ ಮನೀಷಾ ಮಾತನಾಡಿ, ‘ಸಿದ್ದರಾಮಯ್ಯ ಅವರ ಬಜೆಟ್ನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ಪಾಸ್ ನೀಡುವುದಾಗಿ ಘೋಷಿಸಲಾಗಿತ್ತು. ಆದರೆ ಇದೀಗ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಉಚಿತ ಬಸ್ ಪಾಸ್ ವ್ಯವಸ್ಥೆ ಮಾಡದೆ ವಿದ್ಯಾರ್ಥಿಗಳ ಆಸೆಯನ್ನು ನಿರಾಸೆ ಮಾಡಿದ್ದಾರೆ ಎಂದರು. ವಿದ್ಯಾರ್ಥಿಗಳಿಗೆ ಉಚಿತ ಕೆಎಸ್ಆರ್ಟಿಸಿ ಬಸ್ಪಾಸ್ ನೀಡಲೇ ಬೇಕು. ಇಲ್ಲದಿದ್ದರೆ ವಿದ್ಯಾರ್ಥಿಗಳು ಸುಮ್ಮನೆ ಕೂರುವುದಿಲ್ಲ. ಈ ವಿಚಾರದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಯಾವುದೇ ರಾಜಕೀಯ ನಾಟಕಗಳಿಗೆ ವಿದ್ಯಾರ್ಥಿ ಸಮುದಾಯ ಮರಳಾಗುವುದಿಲ್ಲ ಇದು ಮುನ್ನೆಚ್ಚರಿಕಾ ಪ್ರತಿಭಟನೆ ಮಾತ್ರವಾಗಿದ್ದು, ಮುಂದೆ ರಾಜ್ಯಾದ್ಯಂತ ಉಗ್ರ ಹೋರಾಟ ಆರಂಭಿಸುತ್ತೇವೆ ಎಂದು ಎಚ್ಚರಿಸಿದರು.
ಪರಿಷತ್ ಪುತ್ತೂರು ಹೋರಾಟ ಪ್ರಮುಖ್ ರಕ್ಷಿತ್ ಕೆದಿಲಾಯ, ವಿವೇಕಾನಂದ ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷ ಲಿಖಿತ್, ಕಾರ್ಯದರ್ಶಿ ಸಂಕೇತ್, ಜೊತೆ ಕಾರ್ಯದರ್ಶಿ ನೀಮಾ, ಡಾ.ರೋಹಿಣಾಕ್ಷ ಶಿರ್ಲಾಲು ಇದ್ದರು.