ಬೆಂಗಳೂರು: ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆಯು ಹೆಬ್ಬಾಳದಲ್ಲಿ ನಿರ್ಮಿಸಿರುವ ಬೀಜ ಪ್ರಮಾಣೀಕರಣ ಭವನವನ್ನು ಕೃಷಿ ಸಚಿವ ಕೃಷ್ಣ ಬೈರೇಗೌಡ ಉದ್ಘಾಟಿಸಿದರು.
ಸಂಸ್ಥೆಯ ಅಧ್ಯಕ್ಷ ಕೆ.ಶ್ರೀನಿವಾಸಯ್ಯ, ‘₹2.37 ಕೋಟಿ ವೆಚ್ಚದಲ್ಲಿ ಈ ಭವನ ನಿರ್ಮಾಣ ಮಾಡಲಾಗಿದೆ. ತಂತ್ರಜ್ಞಾನ ಮತ್ತು ಪ್ರಯೋಗಾಲಯದ ಸಭಾಭವನ ಹಾಗೂ ಡಿಎನ್ಎ ಪ್ರಯೋಗಾಲಯವನ್ನು ನಿರ್ಮಿಸಲಾಗಿದೆ’ ಎಂದರು.
ಬೀಜ ಪ್ರಮಾಣೀಕರಣ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಹಾಗೂ ಪಾರದರ್ಶಕವಾಗಿ ಕೈಗೊಳ್ಳುವ ಉದ್ದೇಶದಿಂದ ಪ್ರಮಾಣೀಕರಣ ತಂತ್ರಾಂಶವನ್ನು ಅಳವಡಿಸಿಕೊಂಡಿದ್ದೇವೆ. ಸಂಸ್ಥೆಯ ಎಲ್ಲ ಕಾರ್ಯಗಳನ್ನು ಆನ್ಲೈನ್ ಮೂಲಕವೇ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದರು.
ಕೃಷಿ ಸಚಿವ ಕೃಷ್ಣಬೈರೇಗೌಡ, ‘ಮುಂಗಾರು ಹಾಗೂ ಹಿಂಗಾರು ಮಳೆಯಲ್ಲಿ 5 ವರ್ಷಗಳಿಂದ ಸಾಕಷ್ಟು ಏರುಪೇರು ಉಂಟಾಗಿದೆ. ಹೀಗಾಗಿ, ಕೃಷಿ ಉತ್ಪಾದನೆಯಲ್ಲಿ ವ್ಯತ್ಯಾಸವಾಗಿದೆ. ಆದರೂ, ಬಿತ್ತನೆ ಬೀಜದ ಕೊರತೆಯಾಗದಂತೆ ರಾಜ್ಯ ಸರ್ಕಾರ ಕ್ರಮಕೈಗೊಂಡಿದೆ’ ಎಂದರು.