ಮಸ್ಕಿ: ತುಂಗಭದ್ರಾ ಎಡದಂಡೆ ಕಾಲುವೆಯ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು ಬಿಡುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ 5 (ಎ) ಕಾಲುವೆ ಹೋರಾಟ ಸಮಿತಿ ನೇತೃತ್ವದಲ್ಲಿ ಹಳೆಯ ಬಸ್ ನಿಲ್ದಾಣದಲ್ಲಿ ರೈತರು ಹೆದ್ದಾರಿ ಬಂದ್ ಮಾಡಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಎಡದಂಡೆ ಕಾಲುವೆಗೆ ನೀರು ಬಿಡುವ ವಿಷಯದಲ್ಲಿ ಸರ್ಕಾರ ಹಾಗೂ ಈ ಭಾಗದ ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ರೈತರು ಬೆಳೆದ ಭತ್ತಕ್ಕೆ ನೀರು ಇಲ್ಲದಿದ್ದರೂ ಸಹ ಸರ್ಕಾರ ನೀರು ಬಿಡಲು ಮುಂದೆ ಬರುತ್ತಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.
ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವೀರನಗೌಡ ಪಾಟೀಲ, ಆರ್, ಬಸನಗೌಡ, ರಾಜಾ ಸೋಮನಾಥ ನಾಯಕ, ಅಪ್ಪಾಜಿಗೌಡ, ಬಸವರಾಜಪ್ಪಗೌಡ, ಶಿವುಕುಮಾರ, ಮಲ್ಲಿಕಾರ್ಜುನ ಹೂವಿನಭಾವಿ ಸೇರಿದಂತೆ ಹಲವಾರು ಮುಖಂಡರು ಮಾತನಾಡಿ ಎಡದಂಡೆ ಕಾಲುವೆ ನೀರು ಬಿಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ರೈತರು ರಸ್ತೆ ತಡೆ ನಡೆಸಿದ್ದರಿಂದ ಒಂದು ಗಂಟೆಗಳ ಕಾಲ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡ ಸಾರ್ವಜನಿಕರು ಪರದಾಡುವಂತಾಯಿತು.
ಸರ್ಕಾರ ಹಾಗೂ ಚುನಾಯಿತ ಪ್ರತಿನಿಧಿಗಳ ವಿರುದ್ಧ ಪ್ರತಿಭಟನಕಾರರು ಧಿಕ್ಕಾರ ಕೂಗಿದರು.
ನಾರಾಯಣಪುರ ಬಲದಂಡೆಯ 5 (ಎ) ಕಾಲುವೆ ಜಾರಿ, ದೇವದಾಸಿ ಮಹಿಳೆಯರಿಗೆ ಕೃಷಿ ಭೂಮಿ ವಿತರಣೆ ಹಾಗೂ ಭತ್ತದ ಬೆಳೆ ಹಾಳಾದ ರೈತರಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ಸರ್ಕಾರಕ್ಕೆ ಬರೆದ ಮನವಿಯನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಿದರು.
ಮಹಾದೇವಪ್ಪಗೌಡ ಪೊಲೀಸ್ ಪಾಟೀಲ, ಬಸನಗೌಡ ಮುದಬಾಳ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು, ರೈತರು ಪಾಲ್ಗೊಂಡಿದ್ದರು.