ಶ್ರೀನಿವಾಸಪುರ: ತಾಲ್ಲೂಕಿನಲ್ಲಿ ಹೊಸದಾಗಿ ಎಂಎಸ್ಐಎಲ್ ಮದ್ಯ ಮಾರಾಟ ಕೇಂದ್ರಗಳನ್ನು ತೆರೆಯುವುದನ್ನು ವಿರೋಧಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ತಹಶೀಲ್ದಾರ್ ವೈ.ರವಿ ಅವರಿಗೆ ಮನವಿ ಸಲ್ಲಿಸಿದರು.
ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಜಿ.ವೀರಭದ್ರಸ್ವಾಮಿ ಮಾತನಾಡಿ, ಬರಪೀಡಿತ ಕೋಲಾರ ಜಿಲ್ಲೆಗೆ ಮದ್ಯ ಶಾಪವಾಗಿ ಪರಿಣಮಿಸಿದೆ. ಗ್ರಾಮೀಣ ಪ್ರದೇಶದ ಬಡವರು ಕೂಲಿ ನಾಲಿ ಮಾಡಿ ಗಳಿಸಿದ ಹಣ ಮದ್ಯದ ಅಂಗಡಿ ಪಾಲಾಗುತ್ತಿದೆ. ಇದರಿಂದ ಕುಟುಂಬಗಳು ಬೀದಿಗೆ ಬೀಳುತ್ತಿವೆ. ಇಂಥ ಸಂರ್ಭದಲ್ಲಿ ಸರ್ಕಾರ ತಾಲ್ಲೂಕಿನಲ್ಲಿ ಹೊಸದಾಗಿ ಎಂಎಸ್ಐಎಲ್ ಮಳಿಗೆ ತೆರೆಲು ಮುಂದಾಗಿರುವುದು ಖಂಡನೀಯ ಎಂದರು.
ಸರ್ಕಾರ ಯಾವುದೇ ಕಾರಣಕ್ಕೂ ಹೊಸದಾಗಿ ಮದ್ಯ ಮಾರಾಟ ಕೇಂದ್ರಗಳಿಗೆ ಅನುಮತಿ ನೀಡಬಾರದು. ಕಾನೂನು ಬಾಹಿರ ಚಟುವಟಿಕೆ ನಡೆಯುವುದನ್ನು ಪ್ರೋತ್ಸಾಹಿಸಬಾರದು. ಒಂದು ವೇಳೆ ನಮ್ಮ ಪ್ರತಿಭಟನೆಯನ್ನು ಲೆಕ್ಕಿಸದೆ ಅನುಮತಿ ನೀಡಿದಲ್ಲಿ ರೈತ ಸಂಘ ಹೋರಾಟ ನಡೆಸುವುದು ಎಂದು ಎಚ್ಚರಿಸಿದರು.
ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎನ್.ಜಿ.ಶ್ರೀರಾಮರೆಡ್ಡಿ ಮಾತನಾಡಿ, ರೈತರು ಬೆಳೆದ ಬೆಳೆಗೆ ಬೆಲೆ ಸಿಗುತ್ತಿಲ್ಲ. ಟೊಮೆಟೊ ಸೇರಿದಂತೆ ಎಲ್ಲ ತರಕಾರಿಗಳ ಬೆಲೆ ಕುಸಿತ ಉಂಟಾಗಿದೆ. ರೈತರು ಸಾಲದ ಬಲೆಗೆ ಬಿದ್ದು ಒದ್ದಾಡುತ್ತಿದ್ದಾರೆ. ಆದರೆ ಸರ್ಕಾರ ಬೆಂಬಲ ಬೆಲೆ ನೀಡುತ್ತಿಲ್ಲ. ಇದು ರೈತ ವಿರೋಧಿ ಕ್ರಮವಾಗಿದೆ ಎಂದು ಹೇಳಿದರು.
ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಬಿ.ನಾರಾಯಣಸ್ವಾಮಿ, ಮುಖಂಡರಾದ ಎನ್.ವೀರಪ್ಪರೆಡ್ಡಿ, ನಂಜುಂಡಪ್ಪ, ಚಂದ್ರಶೇಖರ್, ವೆಂಕಟಶಾಮಿರೆಡ್ಡಿ, ಅಶ್ವತ್ಥ್, ಚಂದ್ರಣ್ಣ, ಶ್ರೀನಿವಾಸರೆಡ್ಡಿ, ರಮೇಶ್, ಶಿವಣ್ಣ, ರಾಮಚಂದ್ರಾರೆಡ್ಡಿ ಇದ್ದರು.