ಮಾನ್ವಿ: ‘ರೈತರು ಹಾಗೂ ಜನ ಸಾಮಾನ್ಯರ ವಿರೋಧಿ ನೀತಿಗಳನ್ನು ಅನುಸರಿಸುತ್ತಿರುವ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ ರಾಜ್ಯದ ಮತದಾರರು ಮತದಾರರು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸೋಲಿಸುವ ಮೂಲಕ ತಕ್ಕ ಪಾಠ ಕಲಿಸಬೇಕು’ ಎಂದು ಜೆಡಿಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಾ ವೆಂಕಟಪ್ಪ ನಾಯಕ ಹೇಳಿದರು.
ಭಾನುವಾರ ಪಟ್ಟಣದಲ್ಲಿ ಜೆಡಿಎಸ್ ಪಕ್ಷದ ನಗರ ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ಮನೆ ಮನೆಗೆ ಕುಮಾರಣ್ಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
‘ಎಚ್.ಡಿ.ಕುಮಾರಸ್ವಾಮಿ ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯದ ರೈತರ ₹ ಸಾವಿರ ಕೋಟಿ ಸಂಪೂರ್ಣ ಸಾಲ ಮನ್ನಾ ಮಾಡುವುದಾಗಿ ಘೋಷಿಸಿದ್ದಾರೆ. ರಾಜ್ಯದ ಸರ್ವಾಂಗೀಣ ಪ್ರಗತಿ ಜೆಡಿಎಸ್ ಪಕ್ಷದಿಂದ ಮಾತ್ರ ಸಾಧ್ಯ. ತುಂಗಭದ್ರಾ ಎಡದಂಡೆ ನಾಲೆಗೆ ಸಮರ್ಪಕ ನೀರು ಹರಿಯದ ಕಾರಣ ಈ ಭಾಗದ ರೈತರು ಅಪಾರ ಪ್ರಮಾಣದ ಬೆಳೆ ನಷ್ಟ ಅನುಭವಿಸಿದ್ದಾರೆ. ತುಂಗಭದ್ರಾ ಕಾಡಾ ಅಧ್ಯಕ್ಷರಾಗಿರುವ ಶಾಸಕ ಹಂಪಯ್ಯ ನಾಯಕ ಈ ಭಾಗದ ರೈತ ಹಿತ ಕಾಪಾಡುವಲ್ಲಿ ವಿಫಲವಾಗಿದ್ದಾರೆ. ಕ್ಷೇತ್ರದ ಅಭಿವೃದ್ಧಿ ಕಡೆಗಣಿಸಿರುವ ಕಾಂಗ್ರೆಸ್ ಶಾಸಕರಿಗೆ ಚುನಾವಣೆಯಲ್ಲಿ ತಕ್ಕಪಾಠ ಕಲಿಸಬೇಕು. ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಮತ ನೀಡಿ ಬೆಂಬಲಿಸ ಬೇಕು’ ಎಂದು ಮನವಿ ಮಾಡಿದರು.
‘ಮನೆ ಮನೆಗೆ ಕುಮಾರಣ್ಣ ಕಾರ್ಯಕ್ರಮದ ಮೂಲಕ ಪಕ್ಷದ ಕಾರ್ಯಕರ್ತರು ಜೆಡಿಎಸ್ ಪಕ್ಷದ ಜನಪರ ಯೋಜನೆಗಳು, ಸಾಧನೆಗಳು ಹಾಗೂ ಪ್ರಣಾಳಿಕೆಯಲ್ಲಿರುವ ಭರವಸೆಗಳ ಕುರಿತು ಮತದಾರರಿಗೆ ವಿವರಿಸಬೇಕು’ ಎಂದರು.
ಜೆಡಿಎಸ್ ನಗರ ಘಟಕದ ಅಧ್ಯಕ್ಷ ಖಲೀಲ್ ಖುರೇಷಿ, ಮುಖಂಡರಾದ ಮಹ್ಮದ್ ಇಸ್ಮಾಯಿಲ್, ಮಲ್ಲಪ್ಪ ಹೂಗಾರ,ಬಿ.ನಾಗರಾಜ್ ಸುಭಾನ್ ಬೇಗ್, ಹಬೀಬ್ ಸಾಬ್ ಎಂ.ಡಿ.ಉಸ್ಮಾನ್, ಜಸ್ವಂತ್ ಚೌಹಾಣ ಭಾಗವಹಿಸಿದ್ದರು.