ಮಲೆಮಹದೇಶ್ವರ ಬೆಟ್ಟ: ಸಮೀಪದ ಹೊಸಳ್ಳಿ ಗ್ರಾಮದಲ್ಲಿ ಸೋಮವಾರ ಅಖಿಲ ಕರ್ನಾಟಕ ಭೋವಿ (ವಡ್ಡರ) ಯುವ ವೇದಿಕೆ ಕ್ರಾಂತಿ ವತಿಯಿಂದ ಗ್ರಾಮ ಘಟಕವನ್ನು ಉದ್ಘಾಟಿಸಲಾಯಿತು.
ಈ ಸಂಧರ್ಭದಲ್ಲಿ ಮಾತನಾಡಿದ ಸಂಘದ ಮುಖಂಡ ಮಹೇಶ್, ಸರ್ಕಾರ ನಮ್ಮ ಸಮುದಾಯವನ್ನು ಕಡೆಗಣಿಸುತಿದ್ದು, ಜಾತಿ ಪ್ರಮಾಣಪತ್ರವನ್ನು ಪಡೆಯಬೇಕಾದರೂ ಹರ ಸಾಹಸಪಡಬೇಕಾದ ಪರಿಸ್ಥಿತಿ ಎದುರಾಗಿದೆ. ಇಂದು ಸರ್ಕಾರಿ ಸವಲತ್ತುಗಳನ್ನು ಪಡೆಯುವಲ್ಲಿ ಭೋವಿ ಸಮುದಾಯದವರು ಹಿಂದುಳಿದಿದ್ದಾರೆ ಎಂದರು.
ಜಿಲ್ಲೆಯಲ್ಲಿ ಸುಮಾರು 1 ಲಕ್ಷ ಭೋವಿ ಸಮುದಾಯದವರಿದ್ದಾರೆ. ಎಲ್ಲಾ ಸಮುದಾಯಗಳಿಗೂ ಸಮುದಾಯ ಭವನ ನಿರ್ಮಿಸಿಕೊಟ್ಟಿರುವ ಸರ್ಕಾರ, ನಮ್ಮ ಸಮುದಾಯವನ್ನು ಕಡೆಗಣಿಸಿರುವುದು ಶೋಚನೀಯ ಎಂದು ಬೇಸರ ವ್ಯಕ್ತಪಡಿಸಿದರು.
ಮುಖಂಡರಾದ ಬಿ. ಗೋವಿಂದ, ಎಸ್.ಆರ್.ಮಹದೇವು ಮಾತನಾಡಿ, ಸುಮಾರು 30 ವರ್ಷಗಳಿಂದಲೂ ಸಮುದಾಯದ ಶ್ರೇಯೋಭಿವೃದ್ಧಿಗಾಗಿ ಹೋರಾಟ ನಡೆಸುತ್ತಿದ್ದೇವೆ ಎಂದರು.
ಏಪ್ರಿಲ್ 8ರಂದು ಅಖಿಲ ಭಾರತ ಭೋವಿ ಸಮುದಾಯ ಸಮಾವೇಶವನ್ನು ಹನೂರು ಪಟ್ಟಣದ ಮಹೇಶ್ವರ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದು, ಸದಾಶಿವ ಆಯೋಗ ವರದಿ ಜಾರಿ ಮಾಡದಂತೆ ಕೋರಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದರು.
ಭೋವಿ ಸಮುದಾಯದ ಮುಖಂಡರಾದ ಎಸ್.ಆರ್ ಮಹದೇವು, ಜಿಲ್ಲಾ ಭೋವಿ ಸಂಘದ ಅಧ್ಯಕ್ಷ ರಾಜು, ಗ್ರಾಮ ಘಟಕದ ಅಧ್ಯಕ್ಷ ಪುಟ್ಟಸ್ವಾಮಿ, ಉಪಾಧ್ಯಕ್ಷ ಚಿನ್ನರಾಜು, ಮುತ್ತುರಾಜು ಹಾಗೂ ಗ್ರಾಮಸ್ಥರು ಹಾಜರಿದ್ದರು.