ಮಂಡ್ಯ: ‘ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೈಗೊಂಡ ನಿರ್ಧಾರ ಐತಿಹಾಸಿಕವಾದುದು’ ಎಂದು ಕೆಪಿಸಿಸಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ, ಡಾ.ರಾಮಮನೋಹರ ಲೋಹಿಯಾ ವಿಚಾರ ವೇದಿಕೆ ಅಧ್ಯಕ್ಷ ಡಾ.ಬಿ.ಎಸ್.ಶಿವಣ್ಣ ಹೇಳಿದರು.
ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗ ವಿಭಾಗದ ವತಿಯಿಂದ ನಗರದ ಕಲಾಮಂದಿರಲ್ಲಿ ಬುಧವಾರ ನಡೆದ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಅವರು ಮಾತನಾಡಿದರು.
‘ರಾಷ್ಟ್ರ ರಾಜಕಾರಣದಲ್ಲಿ ಕಾಂಗ್ರೆಸ್ ನೀಡಿದ ಕೊಡುಗೆಗಳಿಂದ ದೇಶ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಆದರೆ ಇಂದು ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಸರ್ಕಾರ ಸುಳ್ಳು, ಪೊಳ್ಳು ಭರವಸೆಗಳ ಮೂಲಕ ಆಡಳಿತ ನಡೆಸುತ್ತಿದೆ. ಬಿಜೆಪಿ ಮುಖಂಡರು ಹಿಂದೂ ಧರ್ಮವನ್ನು ಗುತ್ತಿಗೆ ಪಡೆದವರಂತೆ ಹೇಳಿಕೆ ನೀಡುತ್ತಿದ್ದಾರೆ. ಸಂವಿಧಾನ ಬದಲಿಸುವ ಮಾತುಗಳ
ನ್ನಾಡುತ್ತಾರೆ. ಕಾಂಗ್ರೆಸ್ ಮುಕ್ತ ದೇಶ ಮಾಡಲು ಕನಸಿನಲ್ಲೂ ಸಾಧ್ಯವಿಲ್ಲ. ಸಾಮಾಜಿಕ ನ್ಯಾಯ ಪರಿಕಲ್ಪನೆಯ ಮೇಲೆ ನಡೆಯುತ್ತಿರುವ ರಾಜ್ಯ ಸರ್ಕಾರ ಇಡೀ ದೇಶದಲ್ಲೇ ಮಾದರಿಯಾಗಿದೆ. ದೇವರಾಜು ಅರಸು ಅವರು ಮಾದರಿಯಲ್ಲಿ ಸಿದ್ದರಾಮಯ್ಯ ಅವರು 165 ಭರವಸೆ ಈಡೇರಿಸಿ ಎಲ್ಲ ವರ್ಗದ ರಾಜ್ಯದ ಜನರ ಅಭಿವೃದ್ಧಿಗೆ ಶ್ರಮಿಸಿದ್ದಾರೆ’ ಎಂದು ಹೇಳಿದರು.
‘ಜೆಡಿಎಸ್ನಲ್ಲಿ ಮೂರು ತಲೆಮಾರುಗಳಿಂದಲೂ ಕುಟುಂಬ ರಾಜಕಾರಣ ಮಾಡುತ್ತಾ ಸಾಮಾನ್ಯ ಜನರಿಗೆ ಅನ್ಯಾಯ ಮಾಡಲಾಗಿದೆ. ಬಿಜೆಪಿಯಲ್ಲಿ ಸ್ವಜನ ಪಕ್ಷಪಾತದಿಂದ ಒಂದು ಅವಧಿಗೆ ಮೂರು ಜನರು ಮುಖ್ಯಮಂತ್ರಿ ಆಗಿ ಆಡಳಿತ ಮಾಡಿದ್ದಾರೆ. ಸಿದ್ದರಾಮಯ್ಯ ಅವರು ಶುದ್ಧ ಹಸ್ತದಿಂದ ಐದು ವರ್ಷ ಪೂರ್ಣಕಾಲಿಕ ಮುಖ್ಯಮಂತ್ರಿ ಆಗಿ ದಾಖಲೆ ಮಾಡಿದ್ದಾರೆ. ಸರ್ಕಾರ ಅಹಿಂದ ಪರಿಕಲ್ಪನೆಯಲ್ಲಿ ಎಲ್ಲಾ ವರ್ಗದ ಜನರಿಗೆ ಸಾಮಾಜಿಕ ನ್ಯಾಯ ನೀಡಿದ್ದಾರೆ’ ಎಂದು ಹೇಳಿದರು.
ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಘಟಕದ ಅಧ್ಯಕ್ಷ ಎಂ.ಡಿ.ಲಕ್ಷ್ಮಿನಾರಾಯಣ ಮಾತನಾಡಿ ‘ರಾಜ್ಯದ ಕಾಂಗ್ರೆಸ್ ಸರ್ಕಾರದ ಆಡಳಿತ ಇಡೀ ದೇಶಕ್ಕೆ ಮಾದರಿಯಾಗಿದೆ. ಜಿಲ್ಲೆಯಲ್ಲಿ ಮೈಷುಗರ್ ಪುನಶ್ಚೇತನ, ಕಬ್ಬಿಗೆ ಬೆಂಬಲ ಬೆಲೆ ನೀಡುವ ಮೂಲಕ ರೈತರನ್ನು ಮೇಲೆತ್ತುವ ಕೆಲಸ ಮಾಡಿದೆ. ಮುಖ್ಯಮಂತ್ರಿಗಳು ಸಾಮಾನ್ಯ ಹಾಗೂ ಬಡವರ ಜೀವನ ಹಸನು ಮಾಡಲು ಅಪಾರ ಕೊಡುಗೆ ನೀಡಿದ್ದಾರೆ. ರಾಜ್ಯದಲ್ಲಿ ಶೇ 52ರಷ್ಟು ಹಿಂದುಳಿದ ವರ್ಗದ ಜನರಿದ್ದಾರೆ. ಪ್ರತಿಯೊಂದು ಹೋಬಳಿ ಮಟ್ಟದಲ್ಲಿ ನಾಯಕರನ್ನು ಗುರುತಿಸಿ ಕೆಪಿಸಿಸಿ ಪದಾಧಿಕಾರಿಯಾಗಿ ಆಯ್ಕೆಮಾಡಬೇಕು. ಮುಂದಿನ ಚುನಾವಣೆಗೆ ಬೂತ್ಮಟ್ಟದಲ್ಲಿ ಮಹಿಳೆಯರು, ಯುವಕರನ್ನು ಸಂಘಟಿಸಿ ಪಕ್ಷದ ಪರ ಕೆಲಸ ಮಾಡಬೇಕು’ ಎಂದು ಹೇಳಿದರು.
ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಎಂ.ಹುಚ್ಚೇಗೌಡ ಅಧಿಕಾರ ಸ್ವೀಕಾರ ಮಾಡಿದರು. ಮುಖಂಡರಾದ ಎಂ.ಎಸ್.ಆತ್ಮಾನಂದ, ಜೆ.ಹುಚ್ಚಪ್ಪ, ಕೆ.ಎಂ.ರಾಮಚಂದ್ರ, ಎಂ.ಡಿ.ಕೃಷ್ಣಮೂರ್ತಿ, ಸಿ.ಡಿ.ಗಂಗಾಧರ್, ಮಂಜುನಾಥ್, ಗಣಿಗ ರವಿಕುಮಾರ್, ಡಿ.ಕೃಷ್ಣಯ್ಯ, ಮಂಜುಳಾ, ಅಂಜನಾ ಶ್ರೀಕಾಂತ್ ಈ ಸಂದರ್ಭದಲ್ಲಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.