ದೇವನಹಳ್ಳಿ: ಸ್ಥಳೀಯರ ಬಹುದಿನದ ಬೇಡಿಕೆಯಾಗಿದ್ದ ಜಿಲ್ಲಾ ಆಡಳಿತ ಕೇಂದ್ರ ಕಚೇರಿಯನ್ನು ಸೂಕ್ತ ಸಮಯದಲ್ಲಿ ಉದ್ಘಾಟಿಸಲಾಗಿದೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಸಂತಸ ವ್ಯಕ್ತಪಡಿಸಿದರು.
ಇಲ್ಲಿನ ಚಪ್ಪರದ ಕಲ್ಲು ಬಳಿ ಗುರುವಾರ ಜಿಲ್ಲಾಡಳಿತ ಕೇಂದ್ರ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಂಡಿದೆ ಎಂದರು.
₹43 ಕೋಟಿ ವೆಚ್ಚದಲ್ಲಿ ನೆಲಮಹಡಿ ಮತ್ತು ಎರಡನೇ ಮಹಡಿ ನಿರ್ಮಾಣ ಮಾಡಲಾಗಿದೆ. ವಿವಿಧ ಇಲಾಖೆಗಳ ಜಿಲ್ಲಾ ಕಚೇರಿಗಳು ಹಾಗೂ ಅವಶ್ಯ ನಾಗರಿಕ ಸೇವೆಗಳು ಒಂದೇ ಸೂರಿನಡಿ ಸುಲಭವಾಗಿ ಸಿಗುವ ಉದ್ದೇಶವನ್ನು ಸರ್ಕಾರ ಈಡೇರಿಸಿದೆ ಎಂದರು.
ಸಂಸದ ಡಾ.ಎಂ.ವೀರಪ್ಪ ಮೊಯಿಲಿ ಮಾತನಾಡಿ, ರಾಜ್ಯದ ಎಲ್ಲಾ ಜಿಲ್ಲೆಗಳಿಗಿಂತ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಕೇಂದ್ರ ಕಚೇರಿ ಕಟ್ಟಡವನ್ನು ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ ಎಂದು ಹೇಳಿದರು.