ಬೆಂಗಳೂರು: ರಾಜ್ಯದಲ್ಲಿ ಇನ್ನು ಲಿಂಗಾಯತ ಮತ್ತು ಬಸವತತ್ವ ಒಪ್ಪುವ ವೀರಶೈವರು ಅಲ್ಪಸಂಖ್ಯಾತರು ಎಂದು ಮಾನ್ಯತೆ ನೀಡಿ ರಾಜ್ಯ ಸರ್ಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.
‘ಲಿಂಗಾಯತ ಹಾಗೂ ವೀರಶೈವ ಲಿಂಗಾಯತರಿಗೆ (ಬಸವ ತತ್ವವನ್ನು ನಂಬುವ) ಅಲ್ಪಸಂಖ್ಯಾತ ಧರ್ಮದ ಮಾನ್ಯತೆ ನೀಡಬೇಕು’ ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸೋಮವಾರವಷ್ಟೇ ಸಚಿವ ಸಂಪುಟ ನಿರ್ಧಾರ ಕೈಗೊಂಡಿತ್ತು.
‘ಲಿಂಗಾಯತಕ್ಕೆ ಪ್ರತ್ಯೇಕ ಧರ್ಮದ ಸ್ಥಾನಮಾನ ನೀಡುವ ಕುರಿತು ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ನೇತೃತ್ವದ ತಜ್ಞರ ಸಮಿತಿ ನೀಡಿದ ವರದಿಯನ್ನು ಸರ್ಕಾರ ಅಂಗೀಕರಿಸಿತ್ತು. ಸಮಿತಿ ವರದಿ ಆಧರಿಸಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗ ನೀಡಿದ ಶಿಫಾರಸುಗಳನ್ನು ಸರ್ಕಾರ ಒಪ್ಪಿಕೊಂಡಿತ್ತು.