ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಹುಲ್ ಗಾಂಧಿ ಯಾತ್ರೆಗೆ ಸಚಿವ ಎಂ. ಕೃಷ್ಣಪ್ಪ ಗೈರು

Last Updated 25 ಮಾರ್ಚ್ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭಾನುವಾರ ಮಂಡ್ಯ ಮತ್ತು ಮೈಸೂರಿನಲ್ಲಿ ಹಮ್ಮಿಕೊಂಡಿದ್ದ ಜನಾರ್ಶೀವಾದ ಯಾತ್ರೆಗೆ ವಸತಿ ಸಚಿವ ಎಂ.ಕೃಷ್ಣಪ್ಪ ಗೈರುಹಾಜರಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಿಂದ ಪಾಂಡವಪುರ, ಶ್ರೀರಂಗಪಟ್ಟಣ ಮಾರ್ಗವಾಗಿ ಮೈಸೂರಿನ ವರೆಗೆ ರಾಹುಲ್ ಗಾಂಧಿ ರೋಡ್‌ ಶೋ ನಡೆಸಿದರು. ಈ ಕಾರ್ಯಕ್ರಮದಲ್ಲಿ ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವರೂ ಆದ ಕೃಷ್ಣಪ್ಪ ಪಾಲ್ಗೊಳ್ಳಲಿಲ್ಲ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರು ಖುದ್ದು ಕೃಷ್ಣಪ್ಪ ಅವರಿಗೆ ದೂರವಾಣಿ ಕರೆ ಮಾಡಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮನವಿ ಮಾಡಿದ್ದರು. ಆದರೆ, ಅವರ ಮನವಿಗೂ ಸಚಿವರು ಪೂರಕವಾಗಿ ಸ್ಪಂದಿಸಲಿಲ್ಲ. ಕೊನೆಯ ಪಕ್ಷ ಮೈಸೂರಿನ ಕಾರ್ಯಕ್ರಮದಲ್ಲಾದರೂ ಭಾಗವಹಿಸುವಂತೆ ಸಿದ್ದರಾಮಯ್ಯ ತಮ್ಮ ಸಹೋದ್ಯೋಗಿಗೆ ಸೂಚಿಸಿದ್ದರೂ ಪ್ರಯೋಜನವಾಗಲಿಲ್ಲ ಎಂದು ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.

ಶನಿವಾರ ಮಳವಳ್ಳಿಯಲ್ಲಿ ನಡೆದ ರಾಹುಲ್ ಗಾಂಧಿ ಕಾರ್ಯಕ್ರಮದಲ್ಲೂ ಸಚಿವರು ಕಾಣಿಸಿಕೊಳ್ಳಲಿಲ್ಲ. ಕಳೆದ ಕೆಲವು ದಿನಗಳಿಂದ ಕೃಷ್ಣಪ್ಪ ಹಾಗೂ ಅವರ ಪುತ್ರ ಶಾಸಕ ಪ‍್ರಿಯಕೃಷ್ಣ ಕಾಂಗ್ರೆಸ್ ತ್ಯಜಿಸಿ ಬಿಜೆಪಿಗೆ ಸೇರಲಿದ್ದಾರೆ ಎಂಬ ವದಂತಿ ಹರಡಿದ್ದು, ರಾಹುಲ್ ಗಾಂಧಿ ಕಾರ್ಯಕ್ರಮಕ್ಕೆ ಗೈರು ಹಾಜರಾಗುವ ಮೂಲಕ ಈ ವದಂತಿಗೆ
ಪುಷ್ಟಿನೀಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಕೃಷ್ಣಪ್ಪ, ತಮ್ಮ ಹತ್ತಿರ ಸಂಬಂಧಿಯೊಬ್ಬರು ನಿಧನರಾಗಿದ್ದರಿಂದ ಯಾತ್ರೆಯಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ. ಶನಿವಾರ ಮಳವಳ್ಳಿಯಲ್ಲಿ ನಡೆದ ಕಾರ್ಯಕ್ರಮಕ್ಕೆ ಹೋಗಿ ವಾಪಸ್ ಬಂದಿದ್ದಾಗಿ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT