ಗದಗ: ಮಳೆಗಾಲ ಮುಗಿಯುವ ಮುನ್ನವೇ ಜಿಲ್ಲೆಯ ಕೆಲವು ಹಳ್ಳಿಗಳಲ್ಲಿ ಕುಡಿಯುವ ನೀರಿನಹಾಹಾಕಾರ ಶುರುವಾಗಿದ್ದು,ಒಂದು ತಿಂಗಳಿಂದ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಯಾಗದ ಹಿನ್ನೆಲೆಯಲ್ಲಿ ಬೇಸತ್ತ ಗ್ರಾಮಸ್ಥರು ಗ್ರಾಮದ ಮುಖಂಡರನ್ನು ಸೋಮವಾರ ಗಜೇಂದ್ರಗಡ ತಾಲ್ಲೂಕಿನ ಲಕ್ಕಲಕಟ್ಟಿ ಗ್ರಾಮದಲ್ಲಿ ಕೂಡಿ ಹಾಕಿ ಪ್ರತಿಭಟನೆ ನಡೆಸಿದರು.
ಗ್ರಾಮಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರನ್ನು ಪಂಚಾಯ್ತಿ ಕಟ್ಟಡದಲ್ಲಿ ಕೂಡಿಹಾಕಿಟೈರ್ಗೆ ಬೆಂಕಿ ಹಚ್ಚಿದ ಗ್ರಾಮಸ್ಥರು, ಸ್ಥಳೀಯ ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮ ಪಂಚಾಯ್ತಿ ಅಧ್ಯಕ್ಷ ಸಿದ್ದಲಿಂಗಯ್ಯ ಮಾಲಗತ್ತಿ, ಉಪಾಧ್ಯಕ್ಷೆ ಭೀಮವ್ವ ಹೊನಕೇರಪ್ಪ ಕೊಪ್ಪದ, ಸದಸ್ಯರಾದ ನಾಗೇಶ ಭಗವತಿ, ದೇವಿಂದ್ರಪ್ಪ ಕಮ್ಮಾರ, ಹೊನ್ನವ್ವ ರಾಠೋಡ, ಕಾರ್ಯದರ್ಶಿ ಬಾಲಚಂದ್ರ ನೆವಾರ ಅವರನ್ನು ಕೋಣೆಯಲ್ಲಿ ಬಂಧಿಸಿ ಅಧಿಕಾರಿಗಳು ಸ್ಥಳಕ್ಕೆ ಬಂದು, ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವವರೆಗೆ ಹೊರಗೆ ಕಳುಹಿಸುವುದಿಲ್ಲ ಎಂದು ಪಟ್ಟು ಹಿಡಿದರು.
‘ಲಕ್ಕಲಕಟ್ಟಿ ಗ್ರಾಮದಲ್ಲಿ ಕಳೆದ ಎರಡು ವರ್ಷಗಳಿಂದ ನೀರಿನ ತೀವ್ರ ಸಮಸ್ಯೆ ಎದುರಿಸುತ್ತಿದೆ. ಇದಕ್ಕೆ ಪರಿಹಾರ ಸಿಗುವ ತನಕ ಸ್ಥಳದಿಂದ ಕದಲುವುದಿಲ್ಲ’ ಎಂದು ಪಟ್ಟು ಹಿಡಿದು ಗ್ರಾಮಸ್ಥರು ಪ್ರತಿಭಟನೆ ಮುಂದುವರಿಸಿದ್ದಾರೆ.