ಚಂಡೀಗಢ/ನವದೆಹಲಿ: ಎಸ್ಸಿ, ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆ–1989 ದುರ್ಬಲಗೊಳಿಸಿರುವ ಸಂಬಂಧ ಹಲವು ದಲಿತ ಸಂಘಟನೆಗಳು ಸೋಮವಾರ ಭಾರತ ಬಂದ್ಗೆ ಕರೆ ನೀಡಿದ್ದು, ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.
ಪರಿಶಿಷ್ಟ ಜಾತಿ, ಪಂಗಡಗಳ ಜನರ ಮೇಲಿನ ದೌರ್ಜನ್ಯದ ಬಗ್ಗೆ ದೂರು ನೀಡಿದ ಕೂಡಲೇ ಆರೋಪಿಗಳ ಬಂಧನ ಮತ್ತು ಪ್ರಕರಣ ದಾಖಲು ಅಗತ್ಯ ಇಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಈ ಕಾಯ್ದೆಗೆ ಹೊಸ ನಿಯಮಗಳನ್ನು ರೂಪಿಸುವ ಬಗ್ಗೆಯೂ ಕೋರ್ಟ್ ಸರ್ಕಾರಕ್ಕೆ ಸೂಚಿಸಿತ್ತು.
ದಲಿತ ಸಂಘಟನೆಗಳು ಹಾಗೂ ವಿರೋಧ ಪಕ್ಷದ ಒತ್ತಾಯದ ಬಳಿಕ ಕೇಂದ್ರ ಸರ್ಕಾರ ಚರ್ಚೆ ನಡೆಸಿ ದೌರ್ಜನ್ಯ ತಡೆ ಕಾಯ್ದೆ ಕುರಿತು ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಮರು ಪರಿಶೀಲನಾ ಅರ್ಜಿ ಸಲ್ಲಿಸಲು ನಿರ್ಧರಿಸಿತ್ತು.
ಸೋಮವಾರ ಸರ್ಕಾರ ತೀರ್ಪು ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ಗೆ ಸಲ್ಲಿಸಿರುವುದಾಗಿ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.
ಈ ನಡುವೆ ದೇಶದ ಹಲವು ಭಾಗಗಳಲ್ಲಿ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಕೆಲವೆಡೆ ಪ್ರತಿಭಟನೆ ಹಿಂಸಾರೂಪ ಪಡೆದುಕೊಂಡಿದೆ.