ಗುಂಡ್ಲುಪೇಟೆ: ಸಮಾಜದಲ್ಲಿ ನಡೆಯುವ ತಪ್ಪುಗಳನ್ನು ತಿದ್ದಿ ಸರಿ ದಾರಿಗೆ ತರುವುದೇ ಕಾನೂನು. ಇದರ ಬಗ್ಗೆ ವಿದ್ಯಾರ್ಥಿಗಳಿಗೆ ಬಾಲ್ಯದಲ್ಲೇ ಅರಿವು ಅಗತ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಚಂದ್ರಶೇಖರ್ ಪಿ. ದಿಡ್ಡಿ ಹೇಳಿದರು.
ತಾಲ್ಲೂಕಿನ ನೆನೆಕಟ್ಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಸೃಷ್ಟಿ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮತ್ತು ಸಮಷ್ಟಿ ಸಮಗ್ರ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ‘ಆ್ಯಸಿಡ್ ದಾಳಿ ಸಂತ್ರಸ್ತರಿಗೆ ಕಾನೂನು ಸೇವಾ ಯೋಜನೆ ಹಾಗೂ ಭೂಕಂಪನ ಸಂತ್ರಸ್ತರಿಗೆ ಕಾನೂನು ಸೇವಾ ಯೋಜನೆ’ ಕಾನೂನು ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪ್ರತಿದಿನ ಮಕ್ಕಳು ಪತ್ರಿಕೆ ಮತ್ತು ವಾರ್ತೆಗಳನ್ನು ನೋಡಬೇಕು. ಆಗ ಜ್ಞಾನ ವಿಸ್ತಾರವಾಗುತ್ತದೆ. ಕಾನೂನಿಗೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ನೋಡುವುದರಿಂದ ಕಾನೂನಿನ ಬಗ್ಗೆ ತಿಳಿದುಕೊಳ್ಳಬಹುದು ಎಂದರು.
ವಕೀಲ ಸಿದ್ದಯ್ಯ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಹಾಯಕ ಸರ್ಕಾರಿ ಅಭಿಯೋಜಕ ಎ.ಎನ್.ರಾಜಣ್ಣ, ಸೃಷ್ಟಿ ಗ್ರಾಮೀಣಾಭಿವೃದ್ಧಿ ಸಂಸ್ಥೆ ವೃಷಬೇಂದ್ರ, ಸಮಷ್ಟಿ ಸಮಗ್ರ ಅಭಿವೃದ್ಧಿ ಟ್ರಸ್ಟ್ನ ಕಾರ್ಯನಿರ್ವಾಹಕ ಗಂಗಾಧರಸ್ವಾಮಿ, ಉಮೇಶ್, ಸುಂದರ್ ಇದ್ದರು.