ನರಗುಂದ: ‘ಕೇಂದ್ರ ಸರ್ಕಾರವು ಬೇರೆ ರಾಜ್ಯಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುತ್ತಿದೆ. ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ತೋರುತ್ತಿದೆ. ಮಹದಾಯಿ ಯೋಜನೆ ಜಾರಿ ವಿಚಾರದಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು ದಿವ್ಯ ನಿರ್ಲಕ್ಷ್ಯ ವಹಿಸಿವೆ’ ಎಂದು ಮಹದಾಯಿ ಹೋರಾಟ ಸಮಿತಿ ಸದಸ್ಯೆ ಅನಸವ್ವ ಶಿಂಧೆ ಆರೋಪಿಸಿದರು.
ಪಟ್ಟಣದಲ್ಲಿ ನಡೆಯುತ್ತಿರುವ ಮಹದಾಯಿ ಧರಣಿಯ 1,006ನೇ ದಿನವಾದ ಮಂಗಳವಾರ ಅವರು ಮಾತನಾಡಿದರು.
‘ರಾಜಕಾರಣಿಗಳಿಗೆ ರೈತರ ಬಗ್ಗೆ ಕಾಳಜಿ ಇಲ್ಲ. ಪ್ರಧಾನಿ ಮೋದಿ ಅವರು ರೈತರ ಹಿತಕಾಯಬೇಕು’ ಎಂದರು.
‘ರೈತರು ರಾಜಕಾರಣಿಗಳಿಗೆ ಸರಿಯಾದ ಬುದ್ಧಿ ಕಲಿಸಬೇಕು. ರೈತರ ಹಿತ ಕಾಯಲು ರಾಜಕೀಯ ಪಕ್ಷಗಳು ಪರಸ್ಪರ ಒಂದಾಗಬೇಕು. ನ್ಯಾಯಮಂಡಳಿಯಲ್ಲಿ ವಾದ ಮಂಡನೆಗೆ ವಕೀಲರಿಗೆ ಬೇಕಾದ ದಾಖಲೆಗಳನ್ನು ಒದಗಿಸಬೇಕು. ರೈತರ ಬದುಕು ಬೀದಿಗೆ ಬರುವ ಮುನ್ನವೇ ಅವರಿಗೆ ಆಸರೆಯಾಗಬೇಕು’ ಎಂದು ಒತ್ತಾಯಿಸಿದರು.