ಮಸ್ಕಿ: ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಲಿಂಗಸಗೂರು ವಿಧಾನಸಭಾ ಕ್ಷೇತ್ರಕ್ಕೆ ಮಾದಿಗ ಸಮುದಾಯವನ್ನು ಪರಿಗಣಿಸಿ ಕಾಂಗ್ರೆಸ್ ಪಕ್ಷದ ಟಿಕೆಟ್ ನೀಡದಿರುವುದನ್ನು ಖಂಡಿಸಿ ಇಲ್ಲಿನ ಮಾದಿಗ ಸಮುದಾಯದ ಮುಖಂಡರು ಮಂಗಳವಾರ ಪ್ರತಿಭಟನೆ ನಡೆಸಿದರು.ಪಟ್ಟಣದ ಹಳೆಯ ಬಸ್ ನಿಲ್ದಾಣದ ಹತ್ತಿರದ ಡಾ. ಅಂಬೇಡ್ಕರ್ ಪ್ರತಿಮೆ ಬಳಿ ರಸ್ತೆ ತಡೆ ನಡೆಸಿ ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಸಾಹಿತಿ ಸಿ. ದಾನಪ್ಪ ನಿಲೋಗಲ್ ಮಾತನಾಡಿ, ‘ಕಾಂಗ್ರೆಸ್ ಪಕ್ಷಕ್ಕಾಗಿ ಲಿಂಗಸಗೂರು ಕ್ಷೇತ್ರದಲ್ಲಿ ಮಾದಿಗ ಸಮುದಾಯದವರು ತುಂಬಾ ವರ್ಷಗಳಿಂದ ಶ್ರಮಪಟ್ಟಿದ್ದಾರೆ. ಮಾದಿಗ ಸಮುದಾಯದಲ್ಲಿ ಸಮರ್ಥ ಅಭ್ಯರ್ಥಿಗಳಿದ್ದರೂ ಪಕ್ಷ ಅವರನ್ನು ಗುರುತಿಸದೇ ಬೇರೆ ಸಮುದಾಯಕ್ಕೆ ಟಿಕೆಟ್ ನೀಡಿರುವುದು ಖಂಡನೀಯ’ ಎಂದರು. ದಲಿತ ಮುಖಂಡರಾದ ದೊಡ್ಡಪ್ಪ ಮುರಾರಿ ಮಾತನಾಡಿ, ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಪಾಠ ಕಲಿಸಬೇಕು ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಎನ್.ಎಸ್. ಬೋಸರಾಜು, ಅಮರೇಗೌಡ ಬಯ್ಯಾಪೂರ, ಸಂಸದ ಬಿ.ವಿ.ನಾಯಕ್ ಹಾಗೂ ಶಾಸಕ ಪ್ರತಾಪಗೌಡ ಪಾಟೀಲ್ ಸೇರಿದಂತೆ ಇನ್ನಿತರರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅಕ್ರೋಶ ವ್ಯಕ್ತಪಡಿಸಿದರು.