ನವದೆಹಲಿ: ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನ ಗೆದ್ದು ಚಾರಿತ್ರಿಕ ಸಾಧನೆ ಮಾಡಿದ್ದ ಮಣಿಕಾ ಬಾತ್ರಾ ಅವರ ಹೆಸರನ್ನು ಭಾರತ ಟೇಬಲ್ ಟೆನಿಸ್ ಫೆಡರೇಷನ್ (ಟಿಟಿಎಫ್) ಅರ್ಜುನ ಪ್ರಶಸ್ತಿಗೆ ಶಿಫಾರಸು ಮಾಡಿದೆ.
ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ನಲ್ಲಿ ನಡೆದಿದ್ದ ಕೂಟದ ಸಿಂಗಲ್ಸ್ನಲ್ಲಿ ಚಿನ್ನ ಗೆದ್ದಿದ್ದ ಮಣಿಕಾ, ತಂಡ ವಿಭಾಗದಲ್ಲಿ ಭಾರತ ಚಿನ್ನದ ಪದಕ ಜಯಿಸುವಲ್ಲೂ ಪ್ರಮುಖ ಪಾತ್ರ ವಹಿಸಿದ್ದರು. ಅವರು ಡಬಲ್ಸ್ ಮತ್ತು ಮಿಶ್ರ ಡಬಲ್ಸ್ ವಿಭಾಗಗಳಲ್ಲಿ ಕ್ರಮವಾಗಿ ಬೆಳ್ಳಿ ಮತ್ತು ಕಂಚಿನ ಪದಕಗಳನ್ನು ಗೆದ್ದಿದ್ದರು.
22 ವರ್ಷದ ಮಣಿಕಾ, ಕೂಟದಲ್ಲಿ ಸಿಂಗಪುರದ ಫೆಂಗ್ ತಿಯಾನ್ ವೀ ಅವರನ್ನು ಎರಡು ಬಾರಿ ಸೋಲಿಸಿದ್ದರು. ವಿಶ್ವ ರ್ಯಾಂಕಿಂಗ್ನಲ್ಲಿ ನಾಲ್ಕನೇ ಸ್ಥಾನ ಹೊಂದಿರುವ ಫೆಂಗ್, ಒಲಿಂಪಿಕ್ಸ್ನಲ್ಲಿ ಮೂರು ಪದಕಗಳನ್ನು ಗೆದ್ದ ಸಾಧನೆ ಮಾಡಿದ್ದಾರೆ.
‘ಮಣಿಕಾ ಅವರು ಈ ಬಾರಿಯ ಕಾಮನ್ವೆಲ್ತ್ನಲ್ಲಿ ನಾಲ್ಕು ಪದಕಗಳನ್ನು ಜಯಿಸಿದ್ದಾರೆ. ಹೀಗಾಗಿ ಅವರ ಹೆಸರನ್ನು ಅರ್ಜುನ ಪ್ರಶಸ್ತಿಗೆ ಶಿಫಾರಸು ಮಾಡಿದ್ದೇವೆ’ ಎಂದು ಟಿಟಿಎಫ್ಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಏಪ್ರಿಲ್ 29ರಿಂದ ಸ್ವೀಡನ್ನಲ್ಲಿ ವಿಶ್ವ ತಂಡ ಚಾಂಪಿಯನ್ಷಿಪ್ ನಡೆಯಲಿದೆ. ಇದರಲ್ಲಿ ಮಣಿಕಾ ಭಾಗವಹಿಸಲಿದ್ದಾರೆ.