ಮೈಸೂರು: ‘ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ಧ. ನನ್ನ ಮಗ ವಿಜಯೇಂದ್ರ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುವುದಿಲ್ಲ. ಇದನ್ನು ತಪ್ಪಾಗಿ ಅರ್ಥೈಸಬೇಡಿ. ಮೈಸೂರು–ಚಾಮರಾಜನಗರ ಭಾಗದಲ್ಲಿ ವಿಜಯೇಂದ್ರ ಪ್ರಚಾರ ನಡೆಸಲಿದ್ದಾನೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ್ ರಾವ್, ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರ ಜೊತೆ ಸಮಾಲೋಚನೆ ನಡೆಸಿದ ಬಳಿಕ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.
ಪ್ರಕಾಶ್ ಜಾವಡೇಕರ್ ಮಾತನಾಡಿ, ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯ ಯುವ ಮೋರ್ಚಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗುವುದು. ಯಡಿಯೂರಪ್ಪ ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದ್ದಾರೆ. ಪಕ್ಷವು ಸಂಪೂರ್ಣವಾಗಿ ಅವರ ಪರವಾಗಿದೆ’ ಎಂದರು.