ಕಲಬುರ್ಗಿ: ‘ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ತಡೆ ಕಾಯ್ದೆಯು ಸುಪ್ರೀಂ ಕೋರ್ಟ್ ತೀರ್ಪಿನಿಂದ ದುರ್ಬಲಗೊಂಡಿದೆ. ಈ ಸಮುದಾಯಗಳ ಹಿತರಕ್ಷಣೆಗಾಗಿ ಕೇಂದ್ರ ಸರ್ಕಾರ ಏಕೆ ಸುಗ್ರೀವಾಜ್ಞೆ ಹೊರಡಿಸಿಲ್ಲ’ ಎಂದು ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದರು.
‘ಕೇಂದ್ರ ಸರ್ಕಾರ ತನಗೆ ಬೇಕಿರುವ ವಿಷಯಗಳಿಗೆ ಮಾತ್ರ ಆಸಕ್ತಿ ವಹಿಸುತ್ತಿದೆ’ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ದೂರಿದರು.
‘ದೌರ್ಜನ್ಯವೆಸಗಿದವರ ಮೇಲೆ ಎಫ್ಐಆರ್ ದಾಖಲಿಸಿ ತಕ್ಷಣ ಬಂಧಿಸದಿದ್ದರೆ ಅದು ದೌರ್ಜನ್ಯಕ್ಕೆ ದಾರಿಮಾಡಿ ಕೊಡುತ್ತದೆ. ಈ ಕಾಯ್ದೆ ಹಿಂದೆ ಹೇಗಿತ್ತೋ ಹಾಗೇ ಇರಬೇಕು’ ಎಂದು ಆಗ್ರಹಿಸಿದರು.
‘ಕಾಂಗ್ರೆಸ್ನ ಕೈಗೂ ಮುಸ್ಲಿಮರ ರಕ್ತದ ಕಲೆ ಅಂಟಿದೆ ಎಂಬ ಕಾಂಗ್ರೆಸ್ ಮುಖಂಡ ಸಲ್ಮಾನ್ ಖುರ್ಷಿದ್ ಹೇಳಿಕೆಯನ್ನು ಗಮನಿಸಿಲ್ಲ. ರಾಜ್ಯದಲ್ಲಿ ಪ್ರಚಾರಕ್ಕೆ ಪ್ರಿಯಾಂಕಾ ವಾದ್ರಾ ಬರಲ್ಲ. ಜೆಡಿಎಸ್ನೊಂದಿಗೆ ಚುನಾವಣೋತ್ತರ ಹೊಂದಾಣಿಕೆಯ ಪ್ರಶ್ನೆ ಊಹಾಪೋಹದಿಂದ ಕೂಡಿದೆ’ ಎಂದು ಅವರು ಪ್ರತಿಕ್ರಿಯಿಸಿದರು.