ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನತಂತ್ರ: ಶೇ 70ಕ್ಕೂ ಹೆಚ್ಚು ಜನರ ಸಂಭ್ರಮ

ಕಾರ್ಯಕರ್ತರ ಮಧ್ಯೆ ಮಾರಾಮಾರಿ
Last Updated 13 ಮೇ 2018, 6:55 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಆಡಳಿತ ಚುಕ್ಕಾಣಿಯನ್ನು ಮುಂದಿನ ಐದು ವರ್ಷ ಯಾರು ಹಿಡಿಯಬೇಕೆಂಬ ‘ಪ್ರಜಾ ತೀರ್ಪು’ ನೀಡುವ ‘ಜನತಂತ್ರ ಹಬ್ಬ’ದಲ್ಲಿ ಶೇ 70ಕ್ಕೂ ಹೆಚ್ಚಿನ ಪ್ರಮಾಣದಲ್ಲಿ ಮತದಾರರು ಪಾಲ್ಗೊಂಡು ಸಂಭ್ರಮಿಸಿದರು.

224 ವಿಧಾನಸಭಾ ಕ್ಷೇತ್ರಗಳ ಪೈಕಿ 222 ಕ್ಷೇತ್ರಗಳಲ್ಲಿ ಅಖಾಡದಲ್ಲಿರುವ 2,622 ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಗಳಲ್ಲಿ ಶನಿವಾರ ಭದ್ರವಾಯಿತು. ಮತದಾನ ಪ್ರಕ್ರಿಯೆ ಪೂರ್ಣಗೊಂಡ ಬಳಿಕ, ವಿದ್ಯುನ್ಮಾನ ಮತ ಯಂತ್ರಗಳನ್ನು (ಇವಿಎಂ) ಸ್ಟ್ರಾಂಗ್‌ ರೂಂಗಳಲ್ಲಿ ಭದ್ರವಾಗಿ ಇಡಲಾಗಿದೆ. ಇದೇ 15ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ನಡೆಯಲಿದೆ.

ಬಿಜೆಪಿ ಅಭ್ಯರ್ಥಿಯ ನಿಧನದಿಂದ ಜಯನಗರ ಹಾಗೂ ಮತದಾರರ ಗುರುತಿನ ಚೀಟಿ ಅಕ್ರಮ ಸಂಗ್ರಹ ಪತ್ತೆಯಾದ ರಾಜರಾಜೇಶ್ವರಿ ನಗರ ಕ್ಷೇತ್ರದ ಮತದಾನ ಮುಂದೂಡಲಾಗಿದೆ. ರಾಜರಾಜೇಶ್ವರಿ ನಗರ ಕ್ಷೇತ್ರಕ್ಕೆ ಇದೇ 28ರಂದು ಚುನಾವಣೆ, 31ರಂದು ಮತ ಎಣಿಕೆ ನಡೆಯಲಿದೆ.

ಇವಿಎಂ ದೋಷದಿಂದ ಬಳ್ಳಾರಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ, ಚಿತ್ರದುರ್ಗ, ಶಿವಮೊಗ್ಗ, ದಾವ
ಣಗೆರೆ ಸೇರಿ ಕೆಲವು ಜಿಲ್ಲೆಗಳ ಮತಗಟ್ಟೆಗಳಲ್ಲಿ ಮತದಾನ ವಿಳಂಬವಾಗಿ ಆರಂಭವಾಯಿತು.

ಧಾರವಾಡ ಜಿಲ್ಲೆಯ ಕೆಲವೆಡೆ ಸಂಜೆ ವೇಳೆ ಭಾರಿ ಮಳೆಯಿಂದ ಮತದಾನ ಮಂದಗತಿಯಲ್ಲಿ ಸಾಗಿತು. ಹಲವೆಡೆ ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಕಾರ್ಯ
ಕರ್ತರ ಮಧ್ಯೆ ವಾಗ್ವಾದ, ಹೊಡೆದಾಟ ನಡೆಯಿತು. ಮತದಾರರಿಗೆ ಅಭ್ಯರ್ಥಿಗಳ ಬೆಂಬಲಿಗರು ಹಣ ಹಂಚುತ್ತಿದ್ದುದು ಕೆಲವೆಡೆ ರಾಜಕೀಯ ಸಂಘರ್ಷಕ್ಕೆ ಕಾರಣವಾಯಿತು.

ಉಳಿದಂತೆ, ಶಾಂತಿಯುತವಾಗಿ ಮತದಾನ ನಡೆಯಿತು. ಮೊದಲ ಬಾರಿಗೆ ತೃತೀಯ ಲಿಂಗಿಗಳು ಮತ ಚಲಾಯಿಸಿದ್ದಾರೆ. ಮತದಾರ ಪಟ್ಟಿಯಲ್ಲಿ ಹೆಸರು ಇಲ್ಲದ ಬಗ್ಗೆ ಕೆಲವೆಡೆ ಮತದಾರರು ಆಕ್ರೋಶ ವ್ಯಕ್ತ ಪಡಿಸಿದರು. ಮಹಿಳಾ ಮತದಾರರಿಗಾಗಿ ಮಹಿಳೆಯರೇ ನಿರ್ವಹಿಸುವ 600 ‘ಪಿಂಕ್’ ಮತ ಕೇಂದ್ರ
ಗಳನ್ನು ಮೊದಲ ಬಾರಿಗೆ ಚುನಾವಣಾ ಆಯೋಗ ವ್ಯವಸ್ಥೆಗೊಳಿಸಿತ್ತು.

ಲಘು ಲಾಠಿ ಪ್ರಹಾರ: ವಿವಿಧೆಡೆ ಕಾರ್ಯ ಕರ್ತರ ನಡುವೆ ಜಟಾಪಟಿ ನಡೆದಿದೆ. ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿ ತಿಳಿಗೊಳಿಸಿದರು. ಶ್ರೀರಂಗಪಟ್ಟಣದ ಕೊಕ್ಕರೆಹುಂಡಿ ಮತಗಟ್ಟೆ ಬಳಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಕಾರ್ಯಕರ್ತರು ನಡುವೆ ಮಾತಿನ ಚಕಮಕಿ ನಡೆಯಿತು.

ಮದ್ದೂರು ತಾಲ್ಲೂಕಿನ ಚಾಮನಹಳ್ಳಿ ಗ್ರಾಮದ ಮತಗಟ್ಟೆ ಬಳಿಯೂ ಈ ಪಕ್ಷಗಳ ಕಾರ್ಯಕರ್ತರು ಗೊಂದಲ ಸೃಷ್ಟಿಸಿದ್ದರಿಂದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.

ಹೊಳೆನರಸೀಪುರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಬಿ.ಪಿ.ಮಂಜೇಗೌಡ ಅವರ ಕಾರಿನ ಮೇಲೆ ಪರಸನಹಳ್ಳಿಯಲ್ಲಿ ಜೆಡಿಎಸ್‌ ಕಾರ್ಯಕರ್ತರು ಕಲ್ಲು ತೂರಿದ್ದಾರೆ. ಬೇಲೂರು ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಲಿಂಗೇಶ್‌ ಅವರು ಬಿಜೆಪಿ ಅಭ್ಯರ್ಥಿ ಎಚ್‌.ಕೆ.ಸುರೇಶ್‌ ಪುತ್ರ ಎಚ್‌.ಎಸ್‌.ಪ್ರಶಾಂತ್‌ಗೌಡ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಪೊಲೀಸ್‌ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಚಾಮುಂಡೇಶ್ವರಿ ಕ್ಷೇತ್ರಲ್ಲೂ ಕಾಂಗ್ರೆಸ್‌– ಜೆಡಿಎಸ್‌ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು.

ಕಲಬುರ್ಗಿ ಜಿಲ್ಲೆಯ ವಾಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ್ ಖರ್ಗೆ ಮತ್ತು ಬಿಜೆಪಿ ಅಭ್ಯರ್ಥಿ ವಾಲ್ಮೀಕಿ ನಾಯಕ್ ಮಧ್ಯೆ ವಾಕ್ಸಮರ ನಡೆಯಿತು. ಸೇಡಂ ತಾಲ್ಲೂಕಿನ ಆಡಕಿ ಗ್ರಾಮದಲ್ಲಿ  ಮತ್ತು ಯಾದಗಿರಿ ಜಿಲ್ಲೆ ಹುಣಸಗಿ ತಾಲ್ಲೂಕಿನ ಯಡಹಳ್ಳಿಯಲ್ಲಿ ಎರಡು ಗುಂಪುಗಳ ಮಧ್ಯೆ ಸಂಘರ್ಷ ನಡೆದಿದೆ. ಇದೇ ಜಿಲ್ಲೆಯ ಚಿಗರಿಹಾಳದಲ್ಲಿ ಬಿಜೆಪಿ, ಕಾಂಗ್ರೆಸ್‌ ಕಾರ್ಯಕರ್ತರ ಮಧ್ಯೆ ಗಲಾಟೆಯಾಗಿದೆ. ರಾಯಚೂರು ಜಿಲ್ಲೆ ಲಿಂಗಸುಗೂರು ತಾಲ್ಲೂಕಿನ ಕಡದರಗಡ್ಡಿ ಗ್ರಾಮದಲ್ಲಿ ಒತ್ತಾಯಪೂರ್ವಕವಾಗಿ ಸ್ಥಳೀಯ ನೌಕರರಿಂದ ಮತದಾನ ಮಾಡಿಸಿದ ತಹಶೀಲ್ದಾರ್‌ ಎಂ.ಎ.ಎಸ್‌. ಬಾಗವಾನ ಅವರಿಗೆ ಗ್ರಾಮಸ್ಥರು 4 ಗಂಟೆ ದಿಗ್ಬಂಧನ ವಿಧಿಸಿದರು. ಭದ್ರಾವತಿ ತಾಲ್ಲೂಕಿನ ಬಿಳಕಿ ತಾಂಡದಲ್ಲಿ ಜೆಡಿಎಸ್, ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಹೊಡೆದಾಟ ನಡೆದಿದೆ.

ರಾಜಧಾನಿಯಲ್ಲಿ ಮಾರಾಮಾರಿ: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ವಿಜಯನಗರ ಬಳಿ ಬಿಬಿಎಂಪಿ ಬಿಜೆಪಿ ಸದಸ್ಯ ಆನಂದ್ ಹೊಸೂರ್ ಮೇಲೆ ಹಾಗೂ ಸಿ.ವಿ. ರಾಮನ್ ನಗರದಲ್ಲಿ ಬಿಬಿಎಂಪಿ ಕಾಂಗ್ರೆಸ್‌ ಸದಸ್ಯ ಎಂ. ಚಂದ್ರಪ್ಪ ರೆಡ್ಡಿ ಮತ್ತು ಪುತ್ರನ ಮೇಲೆ ಹಲ್ಲೆ ನಡೆದಿದೆ.

ಚಾಮರಾಜಪೇಟೆ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಜಮೀರ್‌ ಅಹ್ಮದ್‌ ಖಾನ್‌ ಹಣ ಹಂಚುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಅಭ್ಯರ್ಥಿ ಲಕ್ಷ್ಮಿನಾರಾಯಣ ಹಾಗೂ ಬೆಂಬಲಿಗರು ಗಲಾಟೆ ಮಾಡಿದರು. ಹಣ ಹಂಚುತ್ತಿದ್ದಾರೆ ಎಂಬ ಆರೋಪದಲ್ಲಿ ಶಾಂತಿನಗರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಎನ್‌.ಎ. ಹ್ಯಾರಿಸ್‌ ಸಂಬಂಧಿಯೊಬ್ಬರನ್ನು ಪಾಲಿಕೆ ಸದಸ್ಯ ಬಿಜೆಪಿಯ ಶಿವಕುಮಾರ್ ಮತ್ತು ಬೆಂಬಲಿಗರು ಥಳಿಸಿದರು.

ಲೊಟ್ಟೆಗೊಲ್ಲಹಳ್ಳಿ: ಮರು ಮತದಾನ

ಹೆಬ್ಬಾಳ ಕ್ಷೇತ್ರದ ಲೊಟ್ಟೆಗೊಲ್ಲಹಳ್ಳಿಯ ಆರ್‌.ಎಂ.ವಿ ಎರಡನೇ ಹಂತದ ಗಾಂಧಿ ವಿದ್ಯಾಲಯ ಕನ್ನಡ ಮತ್ತು ತಮಿಳು ಪ್ರಾಥಮಿಕ ಶಾಲೆಯ ಎರಡನೇ ಮತಗಟ್ಟೆಯ (158/2) ಇವಿಎಂನಲ್ಲಿ ದೋಷ ಕಾಣಿಸಿಕೊಂಡ ಕಾರಣ, ಇಲ್ಲಿ ಸೋಮವಾರ (ಮೇ 14) ಮರು ಮತದಾನ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT