ಹಾವೇರಿ: ಹಾನಗಲ್ ತಾಲ್ಲೂಕಿನ ನಾಲ್ಕರ ಕ್ರಾಸ್ ಸಮೀಪ ಈಚೆಗೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಎದುರು ಜ.20ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಅತ್ಯಾಚಾರಿಗಳನ್ನು ಬಂಧಿಸುವಲ್ಲಿ ಹಾಗೂ ಸೂಕ್ತ ತನಿಖೆಯನ್ನು ಕೈಗೊಳ್ಳುವಲ್ಲಿ ಪೋಲಿಸ್ ಇಲಾಖೆಯು ರಾಜ್ಯ ಸರ್ಕಾರದ ಮಧ್ಯವರ್ತಿಯಂತೆ ನಡೆದುಕೊಳ್ಳುವ ನೀತಿಯನ್ನು ಖಂಡಿಸಿ ಹಾಗೂ ಸಂತ್ರಸ್ತೆಗೆ ಸೂಕ್ತ ಪರಿಹಾರವನ್ನು ರಾಜ್ಯ ಸರ್ಕಾರ ಘೋಷಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಅರುಣಕುಮಾರ ಪೂಜಾರ ತಿಳಿಸಿದರು.
ಅಂದು ಮಧ್ಯಾಹ್ನ 12 ಗಂಟೆಗೆ ಜಿಲ್ಲಾ ಬಿಜೆಪಿ ಕಾರ್ಯಾಲಯದಿಂದ ಪಾದಯಾತ್ರೆ ಹೊರಟು ಎಸ್ಪಿ ಕಚೇರಿ ತಲುಪಿ ಅಲ್ಲಿ ಪ್ರತಿಭಟನೆ ನಡೆಸುತ್ತೇವೆ. ಈ ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಬಸವರಾಜ ಬೊಮ್ಮಾಯಿ, ಜಿಲ್ಲೆಯ ಹಾಲಿ, ಮಾಜಿ ಸಚಿವರು, ಶಾಸಕರು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.