ನವದೆಹಲಿ: ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಅರವಿಂದ ಕೇಜ್ರಿವಾಲ್ ಬಂಧನ ಖಂಡಿಸಿ ಎಎಪಿ ಕಾರ್ಯಕರ್ತರು ಇಂದು (ಶನಿವಾರ) ಪ್ರತಿಭಟನೆ ನಡೆಸಿದ್ದಾರೆ.
ಪೂರ್ವ ದೆಹಲಿ ಕ್ಷೇತ್ರದ ಎಎಪಿ ಅಭ್ಯರ್ಥಿ ಕುಲದೀಪ್ ಕುಮಾರ್ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಅಭಿಯಾನದಲ್ಲಿ ಭಿತ್ತಿಪತ್ರಗಳನ್ನು ಹಿಡಿದು ‘ಜೈಲ್ ಕಾ ಜವಾಬ್ ವೋಟ್ ಸೇ’ ಎಂದು ಎಎಪಿ ಕಾರ್ಯಕರ್ತರು ಘೋಷಣೆ ಕೂಗಿದರು.
ನಂತರ ಮಾತನಾಡಿದ ಕುಲದೀಪ್, ‘ಬಿಜೆಪಿಯ ಸರ್ವಾಧಿಕಾರ ಆಡಳಿತ ಮತ್ತು ಕೇಜ್ರಿವಾಲ್ ಬಂಧನಕ್ಕೆ ತಕ್ಕ ಉತ್ತರ ನೀಡಲು ದೆಹಲಿಯ ಜನತೆ ಸಿದ್ಧರಾಗಿದ್ದಾರೆ’ ಎಂದು ಹೇಳಿದರು.
ಪ್ರಸ್ತುತ ತಿಹಾರ್ ಜೈಲಿನಲ್ಲಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಾರ್ಚ್ 21ರಂದು ಜಾರಿ ನಿರ್ದೇಶನಾಲಯ ಬಂಧಿಸಿತ್ತು.
ಪೂರ್ವ ದೆಹಲಿ ಕ್ಷೇತ್ರದ ಎಎಪಿ ಅಭ್ಯರ್ಥಿ ಕುಲದೀಪ್ ಕುಮಾರ್ ಪರ ಮತಯಾಚನೆ ಮಾಡುವ ಮೂಲಕ ಸುನೀತಾ ಕೇಜ್ರಿವಾಲ್ ಅವರು ಇಂದು (ಶನಿವಾರ) ಪ್ರಚಾರ ಕಾರ್ಯ ಆರಂಭಿಸಲಿದ್ದಾರೆ. ದೆಹಲಿ ಹೊರತುಪಡಿಸಿ ಇತರ ಮೂರು ರಾಜ್ಯಗಳಲ್ಲೂ ಅವರು ಪ್ರಚಾರ ನಡೆಸಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.