ಹೈದರಾಬಾದ್: 2016ರಲ್ಲಿ ನಡೆದ ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣದಲ್ಲಿ ಪೊಲೀಸರು ಸಲ್ಲಿಸಿರುವ ಅಂತಿಮ ವರದಿಗೆ ವೇಮುಲ ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದು ಈ ಹಿನ್ನೆಲೆಯಲ್ಲಿ ಇಂದು ರೋಹಿತ್ ವೇಮುಲ ತಾಯಿ ರಾಧಿಕಾ ವೇಮುಲ ಅವರು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರನ್ನು ಭೇಟಿಯಾದರು.
ನನ್ನ ಮಗನ ಸಾವಿಗೆ ನ್ಯಾಯ ದೊರಕಿಸಿಕೊಡಿ ಎಂದು ರಾಧಿಕಾ ಅವರು ಸಿಎಂ ಬಳಿ ಮನವಿ ಮಾಡಿಕೊಂಡಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ರೇವಂತ್ ರೆಡ್ಡಿ ಅವರು, ಪ್ರಕರಣವನ್ನು ಮರು ತನಿಖೆ ನಡೆಸಲು ಆದೇಶಿಸಲಾಗುವುದಾಗಿ ಭರವಸೆ ನೀಡಿದ್ದಾರೆ.
ಅಲ್ಲದೇ ಮರು ತನಿಖೆ ಕೋರಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗುವುದು ಎಂದು ರೋಹಿತ್ ವೇಮುಲ ಸಹೋದರ ರಾಜ ವೇಮುಲ ಸಹ ಮಾಧ್ಯಮಗಳಿಗೆ ತಿಳಿಸಿದ್ದಾರೆ.
‘ರೋಹಿತ್ ವೇಮುಲ ಅವರು ಪರಿಶಿಷ್ಟ ಜಾತಿಗೆ ಸೇರಿದವರಲ್ಲ ಮತ್ತು ತನ್ನ ನಿಜವಾದ ಗುರುತು ಎಲ್ಲಿ ಬಯಲಾಗುತ್ತದೆಯೋ ಎಂಬ ಆತಂಕದಿಂದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಪೊಲೀಸರು ಸಲ್ಲಿಸಿದ ಅಂತಿಮ ವರದಿಯಲ್ಲಿ ಹೇಳಲಾಗಿದೆ.