ಮುಂಬೈ: ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಗುರುವಾರ ಹೇಳಿದರು.
‘ಮುಖ್ಯಮಂತ್ರಿ ಏಕನಾಥ ಶಿಂದೆ ಮತ್ತು ಫಡಣವೀಸ್ ಅವರು ಅಮಲೇರಿದ ಕೋತಿಗಳಂತೆ, ಅವರು ದೆಹಲಿಯಲ್ಲಿ ಕುಳಿತವರ ಅಣತಿಯಂತೆ ಕಾರ್ಯನಿರ್ವಹಿಸುತ್ತಿದ್ದಾರೆ’ ಎಂದು ಉದ್ಧವ್ ಅವರು ಬುಧವಾರ ಲೇವಡಿ ಮಾಡಿದ್ದರು.
ಇದಕ್ಕೆ ಪ್ರತಿಕ್ರಿಯಿಸಿರುವ ಫಡಣವೀಸ್, ಉದ್ಧವ್ ಅವರಿಗೆ ಮನೋವೈದ್ಯರಿಂದ ಚಿಕಿತ್ಸೆ ಕೊಡಿಸುವ ಅಗತ್ಯವಿದೆ. ಚುನಾವಣೆಯಲ್ಲಿ ಸೋಲುವ ಭೀತಿ ಕಾಡಿರುವುದರಿಂದ ಅವರು ಈ ರೀತಿ ಮಾತನಾಡುತ್ತಿದ್ದಾರೆ ಎಂದು ತಿಳಿಸಿದರು.
ಜನರು ಶಿವಸೇನಾ ಉದ್ಧವ್ ಠಾಕ್ರೆ ಬಣವನ್ನು ತಿರಸ್ಕರಿಸಿದ್ದಾರೆ. ಈ ಕಾರಣಕ್ಕೆ ಅವರು ಕೆಟ್ಟ ಭಾಷೆಯನ್ನು ಬಳಸುತ್ತಿದ್ದಾರೆ ಎಂದರು.