ಟಿಪ್ಪು ಅನಧಿಕೃತ ನಾಮಫಲಕ: ಪ್ರತಿಭಟನೆ

ಬೆಂಗಳೂರು: ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಜಕ್ಕೂರು ವಾರ್ಡ್ನ ಬೆಳ್ಳಹಳ್ಳಿ ವೃತ್ತಕ್ಕೆ ಟಿಪ್ಪು ಸುಲ್ತಾನ್ ಹೆಸರಿನ ಅನಧಿಕೃತ ನಾಮಫಲಕ ಮತ್ತು ಫ್ಲೆಕ್ಸ್ ಅಳವಡಿಸಿರುವುದನ್ನು ವಿರೋಧಿಸಿ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಯಲಹಂಕ ವಲಯದ ಬಿಬಿಎಂಪಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
‘ವೃತ್ತದಲ್ಲಿ ಟಿಪ್ಪುವಿನ ಅನಧಿಕೃತ ನಾಮಫಲಕ ಮತ್ತು ಫ್ಲೆಕ್ಸ್ಗಳನ್ನು ಅಳವಡಿಸಿದ್ದಾರೆ. ಅವುಗಳಿಗೆ ಯಾವುದೇ ಪರವಾನಗಿ ಇಲ್ಲದಿದ್ದರೂ ಬಿಬಿಎಂಪಿ ಇನ್ನು ತೆರವುಗೊಳಿಸಿಲ್ಲ. ಕೂಡಲೇ ತೆರವು ಮಾಡಬೇಕು’ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಬಿಜೆಪಿ ಮುಖಂಡರು ಪ್ರತಿಭಟನೆಗೆ ಸಾಥ್ ನೀಡಿದರು. 15 ದಿನಗಳ ಒಳಗೆ ತೆರವು ಮಾಡಬೇಕು ಎಂದು ಆಗ್ರಹಿಸಿದರು.
ವೇದಿಕೆಯ ಪ್ರಧಾನ ಕಾರ್ಯದರ್ಶಿ ಕೆ.ಟಿ.ಉಲ್ಲಾಸ್, ‘ಈ ವೃತ್ತಕ್ಕೆ ಟಿಪ್ಪು ಹೆಸರು ನಾಮಕರಣ ಮಾಡಬೇಕು ಎಂದು ಇಸ್ಲಾಮಿಯಾ ಟ್ರಸ್ಟ್ ಸೇರಿದಂತೆ ಇತರೆ ಸಂಸ್ಥೆಗಳು ಸ್ಥಳೀಯ ಶಾಸಕ ಕೃಷ್ಣ ಬೈರೇಗೌಡರಿಗೆ ಮನವಿ ನೀಡಿವೆ. ಆದ್ದರಿಂದ ಶಾಸಕರು ಟಿಪ್ಪು ಹೆಸರು ನಾಮಕರಣ ಮಾಡಿ, ನಾಮಫಲಕ ಅಳವಡಿಸಲು ಕ್ರಮ ಕೈಗೊಳ್ಳುವಂತೆ ಬಿಬಿಎಂಪಿಯ ಜಂಟಿ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಇದೆಲ್ಲದಕ್ಕೂ ಕೃಷ್ಣ ಬೈರೇಗೌಡರ ಕುಮ್ಮಕ್ಕಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವೇದಿಕೆ ಅಧ್ಯಕ್ಷ ರಾಜಣ್ಣ, ‘ಆಯುಕ್ತರಿಗೆ ಪತ್ರ ಬರೆಯುತ್ತಿದ್ದಂತೆ ಇಲ್ಲಿ ಫ್ಲೆಕ್ಸ್ ಅಳವಡಿಸಿದ್ದಾರೆ. ಟಿಪ್ಪು ಹೆಸರಿನ ಬದಲು ಮಾಜಿ ಶಾಸಕ ಬಸವರಾಜ ಲಿಂಗಪ್ಪ ಅವರ ಹೆಸರನ್ನು ವೃತ್ತಕ್ಕೆ ನಾಮಕರಣ ಮಾಡಬೇಕು’ ಎಂದು ಒತ್ತಾಯಿಸಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.