ಮಂಗಳೂರು: ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೂ ನಿಫಾ ಸೋಂಕು ಪ್ರಕರಣಗಳು ಪತ್ತೆಯಾಗಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಸ್.ಸಸಿಕಾಂತ್ ಸೆಂಥಿಲ್ ತಿಳಿಸಿದರು.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಇಬ್ಬರ ರಕ್ತ ಮತ್ತು ಕಫದ ಮಾದರಿ ಸಂಗ್ರಹಿಸಲಾಗಿತ್ತು. ಎರಡೂ ಪ್ರಕರಣದಲ್ಲಿ ಋಣಾತ್ಮಕ ವರದಿ ಬಂದಿದೆ. ಜಿಲ್ಲೆಯಲ್ಲಿ ನಿಫಾ ಸೋಂಕು ಪತ್ತೆಯಾಗಿದೆ ಎಂಬುದು ಸಂಪೂರ್ಣ ಸುಳ್ಳು ಸುದ್ದಿ’ ಎಂದರು.
ಒಬ್ಬ ಮಹಿಳೆ ಕೋಝಿಕ್ಕೋಡ್ ಜಿಲ್ಲೆಯ ವೈದ್ಯಕೀಯ ಕಾಲೇಜು ಒಂದರ ಉದ್ಯೋಗಿ. ಅವರು ಮಂಗಳೂರಿನಲ್ಲಿ ದಾಖಲಾಗಿದ್ದರು. ಅವರಿಗೆ ಸೋಂಕು ತಗುಲಿರಬಹುದು ಎಂಬ ಶಂಕೆ ಇತ್ತು. ಇನ್ನೊಂದು ಪ್ರಕರಣದಲ್ಲೂ ಮಣಿಪಾಲದ ಪ್ರಯೋಗಾಲಯಕ್ಕೆ ಮಾದರಿ ಕಳುಹಿಸಿ ಪರೀಕ್ಷೆ ನಡೆಸಲಾಗಿತ್ತು ಎಂದು ತಿಳಿಸಿದರು.
ಕೇರಳದಲ್ಲಿ ಖರ್ಜೂರ ಜಾತಿಗೆ ಸೇರಿದ ‘ತರಿ’ ಎಂಬ ಮರದಿಂದ ತೆಗೆದ ಸೇಂದಿ ಸೇವನೆಯಿಂದ ಸೋಂಕು ತಗುಲಿರುವ ಶಂಕೆ ಇದೆ. ಬಾವಲಿಗಳು ಇದಕ್ಕೆ ಕಾರಣವಾಗಿರುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಸೇಂದಿ ನಿರ್ಬಂಧಿಸುವ ಕುರಿತು ಚರ್ಚೆ ನಡೆದಿದೆ. ಶೀಘ್ರದಲ್ಲೇ ನಿರ್ಧಾರಕ್ಕೆ ಬರಲಾಗುವುದು ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.