ಬೆಂಗಳೂರು: ಉದ್ಯಮಿ ಲೋಕನಾಥ್ ಪುತ್ರ ವಿದ್ವತ್ ಮೇಲೆ ನಗರದ ಯು.ಬಿ ಸಿಟಿಯ ಫರ್ಜಿ ಕೆಫೆಯಲ್ಲಿ ಮೊಹಮದ್ ನಲಪಾಡ್ ಹಾಗೂ ಆತನ ಸ್ನೇಹಿತರು ನಡೆಸಿದ್ದಾರೆ ಎನ್ನಲಾದ ಹಲ್ಲೆ ಆರೋಪ ಪ್ರಕರಣದ ಏಳನೇ ಆರೋಪಿ ಅಭಿಷೇಕ್ಗೆ ಹೈಕೋರ್ಟ್ ಜಾಮೀನು ನೀಡಿದೆ.
ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹ ಅವರಿದ್ದ ರಜಾಕಾಲದ ಏಕಸದಸ್ಯ ನ್ಯಾಯಪೀಠ ಗುರುವಾರ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ವಿಚಾರಣಾ ನ್ಯಾಯಾಲಯದ ಅನುಮತಿ ಇಲ್ಲದೆ ವ್ಯಾಪ್ತಿ ಪ್ರದೇಶ ಬಿಟ್ಟು ಹೋಗಬಾರದು, ಪ್ರತಿ ತಿಂಗಳ ಕೊನೆಯ ದಿನ ಪೊಲೀಸ್ ಠಾಣೆಯಲ್ಲಿ ಹಾಜರಿ ಹಾಕಬೇಕು' ಎಂದು ಷರತ್ತು ವಿಧಿಸಲಾಗಿದೆ.
ಅರ್ಜಿದಾರರ ಪರ ವಕೀಲ ಎಚ್.ಎಸ್.ಚಂದ್ರಮೌಳಿ ಅವರು, 'ಅರ್ಜಿದಾರರ ವಿರುದ್ಧ ಪ್ರಬಲ ಸಾಕ್ಷಿಗಳಿಲ್ಲ. ಗಲಾಟೆ ನಡೆದ ಸಂದರ್ಭದಲ್ಲಿ ಅಭಿಷೇಕ್ ಯಾವುದೇ ಆಯುಧ ಹೊಂದಿರಲಿಲ್ಲ. ಪೋಲಿಸರು ಹೊರಿಸಿರುವ ಆರೋಪಗಳು ನಿರಾಧಾರವಾಗಿವೆ. ಅರ್ಜಿದಾರರು ಈಗಾಗಲೇ 90 ದಿನಗಳಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ. ಆದ್ದರಿಂದ ಜಾಮೀನು ನೀಡಬೇಕು' ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.ಇದಕ್ಕೆ ಪ್ರತಿಯಾಗಿ ಪ್ರಾಸಿಕ್ಯೂಷನ್ ಪರ ವಕೀಲ ಎಂ.ಎಸ್. ಶ್ಯಾಮಸುಂದರ್, 'ವಿದ್ವತ್ ಮೇಲೆ ಹಲ್ಲೆ ನಡೆಸಿದ ತಂಡದಲ್ಲಿ ಅಭಿಷೇಕ್ ಮುರಳಿ ಇದ್ದರು ಎಂಬುದನ್ನು ಚಿತ್ರನಟ ಅಂಬರೀಷ್ ಅವರ ಮಗ ಅಭಿಷೇಕ್ ಗುರುತಿಸಿದ್ದಾರೆ. ಆರೋಪಿ ಸಾಕ್ಷ್ಯ ನಾಶ ಮಾಡುವ ಸಾಧ್ಯತೆ ಇದೆ. ಆದ್ದರಿಂದ ಜಾಮೀನು ನೀಡಬಾರದು' ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು. ಆದರೆ, ನ್ಯಾಯಪೀಠ ಇದನ್ನು ಮಾನ್ಯ ಮಾಡದೆ, ಷರತ್ತುಬದ್ಧ ಜಾಮೀನು ನೀಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.