ADVERTISEMENT

ಗಲ್ಲುಶಿಕ್ಷೆ: ವೈಜ್ಞಾನಿಕವಾಗಿ ಅಧ್ಯಯನ ಮಾಡಿದ್ದೀರಾ?

ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಪ್ರಶ್ನೆ

ಪಿಟಿಐ
Published 23 ಏಪ್ರಿಲ್ 2018, 19:58 IST
Last Updated 23 ಏಪ್ರಿಲ್ 2018, 19:58 IST

ನವದೆಹಲಿ: ಅತ್ಯಾಚಾರ ತಡೆಯಲು ಗಲ್ಲು ಶಿಕ್ಷೆಯಿಂದ ಸಾಧ್ಯವೇ ಎನ್ನುವ ಕುರಿತು ಯಾವುದಾದರೂ ಸಂಶೋಧನೆ ಅಥವಾ ವೈಜ್ಞಾನಿಕ ಅಧ್ಯಯನ ನಡೆಸಲಾಗಿದೆಯೆ ಎಂದು ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ‍ಪ್ರಶ್ನಿಸಿದೆ.

ಅಪರಾಧ ಕಾನೂನು (ತಿದ್ದುಪಡಿ) ಕಾಯ್ದೆ 2013 ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಹಳೆಯ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಗೀತಾ ಮಿತ್ತಲ್ ಮತ್ತು ನ್ಯಾಯಮೂರ್ತಿ ಸಿ. ಹರಿಶಂಕರ್ ಅವರನ್ನೊಳಗೊಂಡ ನ್ಯಾಯಪೀಠ ಈ ಪ್ರಶ್ನೆ ಕೇಳಿದೆ.  

ಅತ್ಯಾಚಾರಿಗೆ ಕನಿಷ್ಠ 7 ವರ್ಷ ಜೈಲು ಶಿಕ್ಷೆ ವಿಧಿಸುವ ನಿಯಮವನ್ನು ಈ ತಿದ್ದುಪಡಿ ಕಾಯ್ದೆಯಲ್ಲಿ ಸೇರಿಸಲಾಗಿತ್ತು ಹಾಗೂ ಅದಕ್ಕಿಂತ ಕಡಿಮೆ ಶಿಕ್ಷೆ ನೀಡಲು ನ್ಯಾಯಾಲಯಕ್ಕೆ ಇರುವ ಸ್ವಾತಂತ್ರ್ಯವನ್ನು ತೆಗೆದುಹಾಕಲಾಗಿತ್ತು.

ADVERTISEMENT

ಕಠುವಾ, ಸೂರತ್‌ ಅತ್ಯಾಚಾರ ಪ್ರಕರಣಗಳಿಗೆ ದೇಶದೆಲ್ಲೆಡೆ ಭಾರಿ ಆಕ್ರೋಶ ವ್ಯಕ್ತವಾದ ಬಳಿಕ ಅತ್ಯಾಚಾರಿಗಳಿಗೆ ಗಲ್ಲುಶಿಕ್ಷೆ ವಿಧಿಸುವ ಸುಗ್ರೀವಾಜ್ಞೆಗೆ ಅಂಗೀಕಾರ ನೀಡಲಾಗಿದೆ.

ಸಂತ್ರಸ್ತರ ಪೋಷಕರ ಆಗ್ರಹ: 12 ವರ್ಷದೊಳಗಿನ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಎಸಗುವವರಿಗೆ ಗಲ್ಲು ಶಿಕ್ಷೆ ವಿಧಿಸುವ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಗೆ ಮಕ್ಕಳ ಹಕ್ಕುಗಳ ಕಾರ್ಯಕರ್ತರ ಜತೆಗೆ ಸಂತ್ರಸ್ತರ ಪೋಷಕರು ಸಹ ವಿರೋಧ ವ್ಯಕ್ತಪಡಿಸಿದ್ದಾರೆ.

ಗಲ್ಲು ಶಿಕ್ಷೆ ವಿಧಿಸುವುದರಿಂದಾಗಿ, ಅತ್ಯಾಚಾರಿಗಳು ಮಕ್ಕಳನ್ನು ಹತ್ಯೆ ಮಾಡುವ ಸಾಧ್ಯತೆ ಇದೆ. ಬದಲಿಗೆ ಕಾನೂನು ವ್ಯವಸ್ಥೆಯನ್ನೇ ಮತ್ತಷ್ಟು ಬಿಗಿಗೊಳಿಸಬೇಕು ಎಂದು ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಸಂತ್ರಸ್ತರ ಪೋಷಕರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.