ADVERTISEMENT

ಕೊಳೆಗೇರಿ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2023, 10:00 IST
Last Updated 21 ಮಾರ್ಚ್ 2023, 10:00 IST
ಸ್ಲಂ ಜನಾಂದೋಲನ ಕರ್ನಾಟಕ ಸಂಘಟನೆಯ ರಾಜ್ಯ ಸಂಚಾಲಕ ಇಮ್ತಿಯಾಜ್‌ ಮಾನ್ವಿ (ಎಡಬದಿಯಿಂದ ಎರಡನೆಯವರು) ಹೊಸಪೇಟೆಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು
ಸ್ಲಂ ಜನಾಂದೋಲನ ಕರ್ನಾಟಕ ಸಂಘಟನೆಯ ರಾಜ್ಯ ಸಂಚಾಲಕ ಇಮ್ತಿಯಾಜ್‌ ಮಾನ್ವಿ (ಎಡಬದಿಯಿಂದ ಎರಡನೆಯವರು) ಹೊಸಪೇಟೆಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು   

ಹೊಸಪೇಟೆ (ವಿಜಯನಗರ): ‘ಕೊಳೆಗೇರಿಗಳ ಸಮಗ್ರ ಅಭಿವೃದ್ಧಿ ಆಗಬೇಕಾದರೆ ರಾಜ್ಯ ಸರ್ಕಾರ ಪ್ರತ್ಯೇಕ ಸಚಿವಾಲಯ ಸ್ಥಾಪಿಸಬೇಕು’ ಎಂದು ಸ್ಲಂ ಜನಾಂದೋಲನ ಕರ್ನಾಟಕ ಸಂಘಟನೆಯ ರಾಜ್ಯ ಸಂಚಾಲಕ ಇಮ್ತಿಯಾಜ್‌ ಮಾನ್ವಿ ಆಗ್ರಹಿಸಿದರು.

ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಳೆಗೇರಿಗಳಲ್ಲಿ ವಾಸವಾಗಿರುವವರ ಜನಸಂಖ್ಯೆ ಆಧರಿಸಿ ಸರ್ಕಾರ ಅನುದಾನ ಮೀಸಲಿಡಬೇಕೆಂದು ಆಗ್ರಹಿಸಲಾಗಿತ್ತು. ಆದರೆ, ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ರಾಜ್ಯದಲ್ಲಿ ಒಂದು ಕೋಟಿಗೂ ಅಧಿಕ ಕೊಳೆಗೇರಿ ನಿವಾಸಿಗಳಿದ್ದಾರೆ. ಸೌಲಭ್ಯವಂಚಿತ ಕೊಳೆಗೇರಿಗಳ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಸ್ಥಾಪಿಸಬೇಕೆಂಬ ಬಹುವರ್ಷಗಳ ಬೇಡಿಕೆಯೂ ಈಡೇರಿಸಿಲ್ಲ ಎಂದರು.

ನಗರದ ಕೊಳೆಗೇರಿಗಳಲ್ಲಿ ವಾಸವಾಗಿರುವವರಿಗೆ ನಗರದಲ್ಲಿ ನರೇಗಾ ಯೋಜನೆ ಅನುಷ್ಠಾನಗೊಳಿಸಿ, ಕೆಲಸ ಕೊಡಬೇಕು. ರಾಜ್ಯದಲ್ಲಿ ವಸತಿ ಹಕ್ಕು ಕಾಯ್ದೆ ಜಾರಿಗೊಳಿಸಬೇಕು. ರಾಜ್ಯದ 3.36 ಲಕ್ಷ ಸ್ಲಂ ಕುಟುಂಬಗಳಿಗೆ ಹಕ್ಕುಪತ್ರವನ್ನು ಕ್ರಯ ಮಾಡುವುದರ ಮೂಲಕ ಭೂಮಾಲೀಕತ್ವದ ಹಕ್ಕು ಕೊಡಬೇಕು. ಸ್ಲಂ ವಾಸಿಗಳಿಗೆ ಉಚಿತ ಮನೆ ನಿರ್ಮಿಸಿಕೊಡಬೇಕು. ರಾಜ್ಯದಲ್ಲಿ ಖಾಸಗಿ ಮಾಲೀಕತ್ವದ ಕೊಳಚೆ ಪ್ರದೇಶಗಳಿಗೆ ಹಕ್ಕುಪತ್ರ ನೀಡಬೇಕು. ನಗರ ಭೂ ಬ್ಯಾಂಕ್‌ ನೀತಿ ಜಾರಿಗೊಳಿಸಿ, ನೆಲಬಾಡಿಗೆ ಸ್ಲಂಗಳಿಗೆ ನೀತಿ ರೂಪಿಸಬೇಕು. ಸಾರ್ವಜನಿಕ ಪಡಿತರ ವ್ಯವಸ್ಥೆ ಬಲಗೊಳಿಸಬೇಕು. ಸರ್ಕಾರಿ ಶಾಲೆಗಳನ್ನು ಸಬಲೀಕರಣಗೊಳಿಸಬೇಕು. ಜಿಲ್ಲಾಸ್ಪತ್ರೆಗಳ ಖಾಸಗೀಕರಣ ನಿಲ್ಲಿಸಬೇಕು. ಕರ್ನಾಟಕ ಸಮಗ್ರ ಸ್ಲಂ ಅಭಿವೃದ್ಧಿ ಕಾಯ್ದೆ 2018 ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

ADVERTISEMENT

ಮೇಲಿನ ಎಲ್ಲ ವಿಷಯಗಳನ್ನು ಒಳಗೊಂಡ ಸ್ಲಂ ಜನರ ಪ್ರಣಾಳಿಕೆ ಸಿದ್ಧಪಡಿಸಲಾಗಿದೆ. ಇದನ್ನು ಶೀಘ್ರದಲ್ಲೇ ಎಲ್ಲ ರಾಜಕೀಯ ಪಕ್ಷಗಳ ಅಧ್ಯಕ್ಷರು, ಪ್ರಚಾರ ಸಮಿತಿ ಅಧ್ಯಕ್ಷರನ್ನು ಭೇಟಿಯಾಗಿ ಕೊಡಲಾಗುವುದು. ಚುನಾವಣೆಗೆ ರಾಜಕೀಯ ಪಕ್ಷಗಳು ಘೋಷಿಸುವ ಚುನಾವಣೆ ಪ್ರಣಾಳಿಕೆಯಲ್ಲಿ ಈ ವಿಷಯವನ್ನು ಸೇರ್ಪಡೆಗೊಳಿಸಬೇಕೆಂದು ಕೋರಲಾಗುವುದು ಎಂದು ತಿಳಿಸಿದರು.

ಸಾವಿತ್ರಿಬಾಯಿ ಫುಲೆ ಮಹಿಳಾ ಸಂಘಟನೆಯ ವೆಂಕಮ್ಮ ಮಾತನಾಡಿ, ವಿಜಯನಗರ ಜಿಲ್ಲೆಯ ಯಾವುದೇ ಸ್ಲಂನಲ್ಲೂ ಮೂಲಸೌಕರ್ಯಗಳಿಲ್ಲ. ನೂತನ ಜಿಲ್ಲೆಯಾದರೂ ಮಹಿಳೆಯರು ಬಹಿರ್ದೆಸೆಗೆ ಬಯಲಿಗೆ ಹೋಗುವುದು ತಪ್ಪಿಲ್ಲ. ಹಲವು ವರ್ಷಗಳಿಂದ ಹಕ್ಕುಪತ್ರ ಕೇಳುತ್ತಿದ್ದರೂ ಕೊಡುತ್ತಿಲ್ಲ ಎಂದು ಆರೋಪಿಸಿದರು.

ಸಂಘಟನೆಯ ಜಿಲ್ಲಾ ಸಚಾಲಕ ಶೇಖರ್‌ ಬಾಬು, ಶಿವರಾಜ, ಈರಮ್ಮ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.