ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರಜಿಲ್ಲೆಯಲ್ಲಿ ಬೆಳೆಯಲಾಗಿರುವ ದ್ರಾಕ್ಷಿ ಸೇರಿದಂತೆ ಯಾವುದೇ ರೀತಿಯ ಹಣ್ಣುಗಳನ್ನು ಹೊರ ಜಿಲ್ಲೆ, ರಾಜ್ಯಗಳಿಗೆ ಸಾಗಣೆ ಮಾಡಿ ಮಾರಾಟ ಮಾಡಲು ರೈತರು ಹಾಗೂ ವ್ಯಾಪಾರಸ್ಥರಿಗೆ ಮಂಗಳವಾರದಿಂದ ಅವಕಾಶ ನೀಡಲಾಗಿದೆ ಎಂದು ಜಿಲ್ಲಾ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಮಹಾಂತೇಶ ಮುರಗೋಡ ತಿಳಿಸಿದ್ದಾರೆ.
ಅವರು ಈ ಬಗ್ಗೆ ಮಾಹಿತಿ ನೀಡಿ, ಸೋಮವಾರ ರಾಜ್ಯ ಮುಖ್ಯಕಾರ್ಯದರ್ಶಿಗಳೊಂದಿಗೆ ನಡೆದ ಸಭೆಯಲ್ಲಿ ಜಿಲ್ಲೆಯಲ್ಲಿ ಬೆಳೆಯಲಾಗಿರುವ ದ್ರಾಕ್ಷಿಯನ್ನು ಮಾರಾಟ ಮಾಡಲು ರೈತರಿಗೆ ಆಗಿರುವ ತೊಂದರ ಕುರಿತಂತೆ ಗಮನಕ್ಕೆ ತಂದ ನಂತರ ಅಂತರ ರಾಜ್ಯದಲ್ಲಿ ದ್ರಾಕ್ಷಿ ಮಾರಾಟಕ್ಕೆ ಅನುಮತಿ ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದ್ರಾಕ್ಷಿ ಹಣ್ಣು ಬೆಳೆಗಾರರು ಅನುಭವಿಸುತ್ತಿರುವ ಕಷ್ಟಗಳ ಕುರಿತಂತೆ ‘ಪ್ರಜಾವಾಣಿ’ಯಲ್ಲಿ ಪ್ರಕಟವಾಗಿದ್ದ ವರದಿಗಳು ಸಹ ಸರ್ಕಾರದ ಗಮನಕ್ಕೆ ಬಂದಿದ್ದರ ಪರಿಣಾಮ ಈ ನಿರ್ಧಾರ ಕೈಗೊಳ್ಳಲಾಗಿದೆ. ದ್ರಾಕ್ಷಿ ಸೇರಿದಂತೆ ಇತರೆ ಹಣ್ಣುಗಳನ್ನು ಬೆಳೆದಿರುವ ರೈತರು ಸಹ ತಹಶೀಲ್ದಾರ್ ಹಾಗೂ ತಾಲ್ಲೂಕಿನ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರಿಂದ ಅಧಿಕೃತ ಪರವಾನಗಿ ಪಡೆದರೆ ಹಣ್ಣು ಸಾಗಣೆಗೆ ಅಗತ್ಯ ವಾಹನ ಬಳಸಲು ಅನುಮತಿ ನೀಡಲಾಗುವುದು ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.