ದೊಡ್ಡಬಳ್ಳಾಪುರ: ‘ತಾಲ್ಲೂಕಿನ ನ್ಯಾಯಾಲಯದ ವ್ಯಾಪ್ತಿಯಲ್ಲಿ 2,612 ವಿವಿಧ ರೀತಿಯ ಪಾಲು ವಿಭಾಗ ಪ್ರಕರಣಗಳು ವಿಚಾರಣೆ ಹಂತದಲ್ಲಿವೆ. ಇವುಗಳಲ್ಲಿ ಬಹುತೇಕ ಪ್ರಕರಣಗಳನ್ನು ಮಾತುಕತೆ ಮೂಲಕ ಲೋಕ ಅದಾಲತ್ನಲ್ಲಿ ಬಗೆಹರಿಸಿಕೊಳ್ಳಲು ಅವಕಾಶವಿದೆ. ವಕೀಲರು ಹಾಗೂ ಕಕ್ಷಿದಾರರು ಅದಾಲತ್ನಲ್ಲಿ ಮುಕ್ತ ಮನಸ್ಸಿನಿಂದ ಮುಂದೆ ಬರಬೇಕಿದೆ’ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಕೆ.ಆರ್. ದೀಪ ಹೇಳಿದರು.
ನಗರದಲ್ಲಿ ಸೆ. 30ರಂದು ನಡೆಯಲಿರುವ ಲೋಕ ಅದಾಲತ್ ಅಂಗವಾಗಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು
412 ಕ್ರಿಮಿನಲ್ ಪ್ರಕರಣ, 1618 ಚೆಕ್ ಬೌನ್ಸ್, ರಾಜಿಗೆ ಅರ್ಹವಾಗಿರುವ 221 ಕ್ರಿಮಿನಲ್ ಪ್ರಕರಣಗಳಿವೆ. ಇವುಗಳನ್ನು ಅದಾಲತ್ನಲ್ಲಿ ಪರಿಹರಿಸಿಕೊಂಡರೆ ಎರಡೂ ಕಡೆಯ ಕಕ್ಷಿದಾರರಿಗೆ ತ್ವರಿತವಾಗಿ ನ್ಯಾಯ ದೊರೆಯಲು ಅನುಕೂಲವಾಗಲಿದೆ. 2008ರಿಂದಲೂ ಇತ್ಯರ್ಥವಾಗದೆ ಇರುವ ಪಾಲು ವಿಭಾಗದ ಪ್ರಕರಣಗಳು ಇವೆ ಎಂದು ವಿವರಿಸಿದರು.
ತಾಲ್ಲೂಕು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ, ನ್ಯಾಯಾಲಯದಲ್ಲಿ ಇತ್ಯರ್ಥವಾಗಿರುವ ಕಂದಾಯ ಇಲಾಖೆಗೆ ಸಂಬಂಧಿಸಿದ ಪ್ರಕರಣಗಳ ತೀರ್ಪುಗಳನ್ನು ಅನುಷ್ಠಾನಗೊಳಿಸಲು ಅಧಿಕಾರಿಗಳು ವಿನಾಕರಣ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ. ಇದರಿಂದ ಕಕ್ಷಿದಾರರು ತಾಲ್ಲೂಕು ಕಚೇರಿಗೆ ಅಲೆದಾಡುವಂತಹ ಸ್ಥಿತಿ ಇದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಮನವಿ ಮಾಡಿದರು.
ಹಿರಿಯ ಪ್ರಧಾನ ಸಿವಿಲ್ ನ್ಯಾಯಾಧೀಶ ಅರವಿಂದ ಸಾಯಿಬಣ್ಣ ಹಾಗರಗಿ, ನ್ಯಾಯಾಲಯದಲ್ಲಿ ಯಾವುದೇ ರೀತಿಯಿಂದ ಇತ್ಯರ್ಥವಾಗುವ ಪ್ರಕರಣ ಸೇರಿದಂತೆ ನ್ಯಾಯಾಲಯದ ಎಲ್ಲಾ ಆದೇಶಗಳನ್ನು ಪಾಲಿಸುವುದು ಕಂದಾಯ, ಸರ್ವೆ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಯ ಕರ್ತವ್ಯವಾಗಿದೆ. ಈ ಬಗ್ಗೆ ಸದ್ಯದಲ್ಲೇ ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಎಲ್ಲಾ ಇಲಾಖೆಗಳ ಸಭೆ ನಡೆಸಿ ಸೂಚನೆ ನೀಡಲಾಗುವುದು ಎಂದು ಹೇಳಿದರು.
ನ್ಯಾಯಾಲಯದ ಆದೇಶಗಳನ್ನು ಕಾಲಮಿತಿಯ ಒಳಗೆ ಪಾಲಿಸದೇ ಇದ್ದರೆ ಕ್ರಮಕೈಗೊಳ್ಳಲು ಅವಕಾಶವಿದೆ. ಆಗಸ್ಟ್ ತಿಂಗಳಲ್ಲಿ ನಡೆದ ಲೋಕ ಅದಾಲತ್ನಲ್ಲಿ 2,890 ಪ್ರಕರಣಗಳು ರಾಜಿ ಸಂಧಾನದ ಮೂಲಕ ಇತ್ಯರ್ಥವಾಗಿವೆ
ಎಂದರು.
ಸಭೆಯಲ್ಲಿ ಹೆಚ್ಚುವರಿ ಹಿರಿಯ ನ್ಯಾಯಾಧೀಶರಾದ ಜ್ಯೋತಿ ಎಸ್. ಕಾಳೆ, ಹೆಚ್ಚುವರಿ ನ್ಯಾಯಾಧೀಶರಾದ ಮಮತಾ ಶಿವಪೂಜೆ, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಡಿ.ಎಂ. ಬೈರೇಗೌಡ, ಖಜಾಂಚಿ ಎ.ವಿ. ಮುರುಳಿ, ಉಪಾಧ್ಯಕ್ಷ ಎಚ್.ಎಂ. ಮಂಜುನಾಥ್, ನಿರ್ದೇಶಕರಾದ ಹರೀಶ್, ಶ್ರೀನಿವಾಸ್, ನರಸಿಂಹಮೂರ್ತಿ, ವಕೀಲರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.