ADVERTISEMENT

ಬೆಳಗಾವಿ: ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ಸಿದ್ಧತೆ

ಬೆಳಗಾವಿಯಲ್ಲಿ ಸಭೆ ನಡೆಸಿದ ಮುಖಂಡರು

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2021, 12:50 IST
Last Updated 11 ಅಕ್ಟೋಬರ್ 2021, 12:50 IST

ಬೆಳಗಾವಿ: ‘ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಭಿವೃದ್ಧಿ ಹಾಗೂ ಜನಪರ ಕಾರ್ಯಗಳನ್ನು ಮೆಚ್ಚಿರುವ ಜನರು, ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ವಿಧಾನಪರಿಷತ್‌ಗೆ ಮುಂಬರುವ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸುವುದು ನಿಶ್ಚಿತ’ ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ವಿಶ್ವಾಸ ವ್ಯಕ್ತಪಡಿಸಿದರು.

ನಗರದಲ್ಲಿ ಭಾನುವಾರ ನಡೆದ ವಿಧಾನಪರಿಷತ್ ಸದಸ್ಯರ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

‘ಈಚೆಗೆ ನಡೆದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಅತ್ಯಧಿಕ ಸಂಖ್ಯೆಯಲ್ಲಿ ಗೆಲುವು ಸಾಧಿಸಿದ್ದಾರೆ. ಅವರ ಬೆಂಬಲ ಹಾಗೂ ಕಾರ್ಯಕರ್ತರ ಪರಿಶ್ರಮದಿಂದ ಗೆಲುವು ಸಾಧಿಸಬಹುದಾಗಿದೆ. ಪಕ್ಷವು, ಎರಡು ಸ್ಥಾನಗಳಿಗೂ (ಸ್ಥಳೀಯ ಸಂಸ್ಥೆಗಳಿಂದ) ಅಭ್ಯರ್ಥಿಗಳನ್ನು ನಿಲ್ಲಿಸುವ ನಿರ್ಧಾರ ಮಾಡಿದರೂ ಗೆಲ್ಲುವ ವಿಶ್ವಾಸವಿದೆ. ಈ ಬಗ್ಗೆ ವರಿಷ್ಠರಿಂದ ಸೂಚನೆ ಬರುವವರೆಗೂ ಕಾಯದೆ ಚುನಾವಣೆಗೆ ವ್ಯವಸ್ಥಿತ ಪೂರ್ವ ತಯಾರಿಯಲ್ಲಿ ನಾಯಕರು, ಜನಪ್ರತಿನಿಧಿಗಳು, ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ತೊಡಗಬೇಕು’ ಎಂದರು.

ADVERTISEMENT

ಅರಣ್ಯ ಸಚಿವ ಉಮೇಶ ಕತ್ತಿ ಮಾತನಾಡಿ, ‘ಕಾರ್ಯಕರ್ತರು ಪಕ್ಷ ನೀಡುವ ಸೂಚನೆಯಂತೆ ನಡೆದುಕೊಳ್ಳಬೇಕು. ಅಭ್ಯರ್ಥಿಗಳು ಯಾರೇ ಆಗಲಿ ಅವರ ಪರವಾಗಿ ಒಗ್ಗಟ್ಟಿನಿಂದ ಕೆಲಸ ನಿರ್ವಹಿಸಬೇಕು’ ಎಂದು ಸೂಚಿಸಿದರು.

ಸಂಸದೆ ಮಂಗಲಾ ಅಂಗಡಿ, ‘ಜಿಲ್ಲೆಯಲ್ಲಿ ಬಿಜೆಪಿ ಸಂಘಟನೆ ಬಲಿಷ್ಠವಾಗಿದೆ. ಕಾರ್ಯಕರ್ತರು ಉತ್ಸಾಹದಿಂದ ಶ್ರಮ ವಹಿಸುತ್ತಿರುವುದರಿಂದ ಎಲ್ಲ ಚುನಾವಣೆಯಲ್ಲೂ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ’ ಎಂದರು.

ವಿಭಾಗ ಪ್ರಭಾರಿ ಚಂದ್ರಶೇಖರ ಕವಟಗಿ, ವಿಧಾನಪರಿಷತ್ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ, ವಿಧಾನಪರಿಷತ್ ಸದಸ್ಯ ಪ್ರದೀಪ ಶೆಟ್ಟರ, ಶಾಸಕರಾದ ಅಭಯ ಪಾಟೀಲ, ಮಹಾಂತೇಶ ದೊಡ್ಡಗೌಡರ, ಮಹದೇವಪ್ಪ ಯಾದವಾಡ, ಅನಿಲ ಬೆನಕೆ, ದುರ್ಯೋಧನ ಐಹೊಳೆ, ಪಕ್ಷದ ರಾಜ್ಯ ಘಟಕದ ವಕ್ತಾರ ಎಂ.ಬಿ. ಝಿರಲಿ ಬೆಳಗಾವಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ, ಚಿಕ್ಕೋಡಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ರಾಜೇಶ ನೇರ್ಲಿ ಮಾತನಾಡಿದರು.

ಮುಖಂಡರಾದ ಉಜ್ವಲಾ ಬಡವನಾಚೆ, ಪ್ರಕಾಶ ಅಕ್ಕಲಕೋಟ, ಬಸವರಾಜ ಯಂಕಂಚಿ, ಶಶಿಕಾಂತ ನಾಯ್ಕ, ಡಾ.ವಿ.ಐ. ಪಾಟೀಲ, ರಮೇಶ ದೇಶಪಾಂಡೆ, ರಾಜೇಂದ್ರ ಹರಕುಣಿ ಇದ್ದರು.

ಮಹಾನಗರ ಜಿಲ್ಲಾ ಘಟಕದ ಶಶಿಕಾಂತ ಪಾಟೀಲ ಸ್ವಾಗತಿಸಿದರು. ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಹೇಶ್ ಮೋಹಿತೆ ನಿರೂಪಿಸಿದರು. ಚಿಕ್ಕೋಡಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸತೀಶ ಅಪ್ಪಾಜಿಗೂಳ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.