ADVERTISEMENT

ಬೆಳಗಾವಿ: ಅತಿಥಿ ಉಪನ್ಯಾಸಕರ ಕಾಯಂಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2021, 13:35 IST
Last Updated 22 ಸೆಪ್ಟೆಂಬರ್ 2021, 13:35 IST

ಬೆಳಗಾವಿ: ‘ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವವರನ್ನು ಕಾಯಂಗೊಳಿಸಬೇಕು ಮತ್ತು ಸಮರ್ಪಕ ವೇತನ ನೀಡಬೇಕು’ ಎಂದು ಕೆಪಿಸಿಸಿ ಶಿಕ್ಷಕರ ಹಾಗೂ ಪದವೀಧರರ ಕೋಶದ ಪ್ರಧಾನ ಕಾರ್ಯದರ್ಶಿ ಎನ್.ಬಿ. ಬನ್ನೂರ ಒತ್ತಾಯಿಸಿದರು.

ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ‘ವೇತನವು ಶಿಕ್ಷಕರ ಹಕ್ಕಾಗಬೇಕೆ ಹೊರತು; ದಾನವಲ್ಲ’ ಎಂದರು.

‘ಸಾಕಷ್ಟು ವಿದ್ಯಾರ್ಹತೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆ ಬರೆದು 15 ವರ್ಷಗಳಿಂದ ಖಾಲಿ ಕೈಯಲ್ಲಿ ದುಡಿಯುತ್ತಿರುವ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಕಲ್ಪಿಸಬೇಕು. ಅಂತೆಯೇ ಜೆಒಸಿ ಉಪನ್ಯಾಸಕರ ಪೈಕಿ ಇನ್ನೂ 500 ಮಂದಿಯನ್ನು ಕಾಯಂ ಮಾಡಿಲ್ಲ. ಶಿಕ್ಷಣ ಸಚಿವರು ಮತ್ತು ಉನ್ನತ ಶಿಕ್ಷಣ ಸಚಿವರು ಈ ಸಮಸ್ಯೆ ಇತ್ಯರ್ಥಕ್ಕೆ ಕೂಡಲೇ ಮುಂದಾಗಬೇಕು’ ಎಂದು ಒತ್ತಾಯಿಸಿದರು.

ADVERTISEMENT

‘ಖಾಸಗಿ, ಅನುದಾನಿತ ಕಾಲೇಜುಗಳ ಉಪನ್ಯಾಸಕರಿಗೆ ಸರ್ಕಾರಿ ಉಪನ್ಯಾಸಕರಿಗೆ ಕೊಡುವಷ್ಟು ವೇತನವನ್ನೇ ನೀಡಬೇಕು. ಈ ನಿಟ್ಟಿನಲ್ಲಿ ಶಿಕ್ಷಣ ಕ್ಷೇತ್ರದಿಂದ ಆಯ್ಕೆಯಾಗಿರುವ ವಿಧಾನಪರಿಷತ್ ಸದಸ್ಯರು ಈ ಬಗ್ಗೆ ಚಕಾರ ಎತ್ತುತ್ತಿಲ್ಲ’ ಎಂದು ಆರೋಪಿಸಿದರು.

‘ಚುನಾವಣೆ ಕೆಲಸದಲ್ಲಿ ಪಾಲ್ಗೊಂಡಿದ್ದ ಶಿಕ್ಷಕರಲ್ಲಿ ಕೆಲವರು ಕೋವಿಡ್‌ನಿಂದ ನಿಧನರಾಗಿದ್ದಾರೆ. ಆದರೆ, ಅವರ ಕುಟುಂಬದವರಿಗೆ ಈವರೆಗೂ ಪರಿಹಾರ ಸಿಕ್ಕಿಲ್ಲ. ಅವಲಂಬಿತರಿಗೆ ಅನುಕಂಪದ ನೌಕರಿಯನ್ನೂ ಕೊಟ್ಟಿಲ್ಲ’ ಎಂದು ದೂರಿದರು.

ಮುಖಂಡರಾದ ಶಾಮಪ್ರಸಾದ, ಪ್ರಭು ಶಿವನಾಯಕರ, ಕೆ.ಬಿ. ಹಿರೇಮಠ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.