ಬೆಳಗಾವಿ: ‘ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಪ್ರವಾಹದಿಂದ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ನೆರೆ ಸಂತ್ರಸ್ತರಲ್ಲಿ ಯಾರಿಗೆ ಪರಿಹಾರ ಸಿಕ್ಕಿಲ್ಲವೂ ಅವರಿಗೆ ಕಲ್ಪಿಸುವ ಬಗ್ಗೆ ವಿಧಾನಮಂಡಲ ಅಧಿವೇಶನ ಮುಗಿದ ಬಳಿಕ ಕ್ರಮ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.
ಬೆಂಗಳೂರಿಗೆ ತೆರಳುವುದಕ್ಕಾಗಿ ಹುಬ್ಬಳ್ಳಿಯಿಂದ ಇಲ್ಲಿನ ಸಾಂಬ್ರಾ ವಿಮಾನನಿಲ್ದಾಣಕ್ಕೆ ಗುರುವಾರ ಬಂದಿದ್ದ ಅವರು ಪತ್ರಕರ್ತರೊಂದಿಗೆ ಮಾತನಾಡಿದರು.
‘ಸಂತ್ರಸ್ತರಿಗೆ ಪರಿಹಾರ ನೀಡುವ ಸಂಬಂಧ ಜಿಲ್ಲಾಧಿಕಾರಿ ಜೊತೆ ಚರ್ಚಿಸಿದ್ದೇನೆ. ಹಿಂದೆ ಭೇಟಿ ನೀಡಿದ್ದಾಗಲೂ ಅಧಿಕಾರಿಗಳಿಗೆ ಕೆಲವು ಸಲಹೆ– ಸೂಚನೆಗಳನ್ನು ನೀಡಿದ್ದೆ. ಅಧಿವೇಶನ ಮುಗಿದ ನಂತರ ಹಣಕಾಸು ಇಲಾಖೆ, ರಾಜೀವ್ಗಾಂಧಿ ವಸತಿ ನಿಗಮ, ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತೇನೆ. ಪ್ರವಾಹದಲ್ಲಿ ಬಿದ್ದ ಮನೆಗಳಿಗೆ ಪರಿಹಾರ ಸಿಕ್ಕಿಲ್ಲ ಎಂಬ ಬಗ್ಗೆ ಇರುವ ಗೊಂದಲಗಳನ್ನು ಸರಿಪಡಿಸುವ ಕೆಲಸ ಮಾಡುತ್ತೇನೆ’ ಎಂದು ಹೇಳಿದರು.
‘ಅಧಿವೇಶನ ನಡೆಯುತ್ತಿರುವುದರಿಂದಾಗಿ, ಇಲ್ಲಿ ಹೆಚ್ಚು ಪ್ರತಿಕ್ರಿಯೆ ನೀಡುವುದಿಲ್ಲ. ಅಧಿವೇಶನದಲ್ಲೇ ಸಮಗ್ರವಾಗಿ ಉತ್ತರ ಕೊಡುತ್ತೇನೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.