ಬೆಂಗಳೂರು: ಪಾನಮತ್ತರಾಗಿ ವಾಹನ ಚಲಾಯಿಸುತ್ತಿದ್ದ 46 ಮಂದಿಯನ್ನು ಸಂಚಾರ ಪೊಲೀಸರು ನಗರದಲ್ಲಿ ಶುಕ್ರವಾರ ರಾತ್ರಿ ವಿಶೇಷ ಕಾರ್ಯಾಚರಣೆ ಸಂದರ್ಭದಲ್ಲಿ ಪತ್ತೆ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
‘ಕೋವಿಡ್ ನಿಯಂತ್ರಣದ ಸಲುವಾಗಿ ಒಂದೂವರೆ ವರ್ಷದಿಂದ ತಪಾಸಣೆಯನ್ನು ಸ್ಥಗಿತಗೊಳಿಸಲಾಗಿತ್ತು. ಇದನ್ನೇ ದುರುಪಯೋಗಪಡಿಸಿಕೊಂಡ ಹಲವರು, ಪಾನಮತ್ತರಾಗಿ ಚಾಲನೆ ಮಾಡುತ್ತಿದ್ದ ಸಂಗತಿ ಗಮನಕ್ಕೆ ಬಂತು. ಇದರಿಂದ ಅಪಘಾತಗಳು ಹೆಚ್ಚಾಗಿದ್ದವು. ಹೀಗಾಗಿ, ವಿಶೇಷ ಕಾರ್ಯಾಚರಣೆ ನಡೆಸಬೇಕಾಯಿತು’ ಎಂದು ಸಂಚಾರ ವಿಭಾಗದ ಜಂಟಿ ಕಮಿಷನರ್ ಬಿ.ಆರ್. ರವಿಕಾಂತೇಗೌಡ ತಿಳಿಸಿದರು.
‘ನಗರದ 44 ಸಂಚಾರ ಠಾಣೆಗಳ ವ್ಯಾಪ್ತಿಯಲ್ಲಿ ರಾತ್ರಿ 9.30ರಿಂದ 12.30ರವರೆಗೆ ವಾಹನಗಳ ತಪಾಸಣೆ ನಡೆಸಲಾಯಿತು. ಮದ್ಯ ಕುಡಿದು ಚಾಲನೆ ಮಾಡುತ್ತಿದ್ದ ಅನುಮಾನದಡಿ ಹಲವರನ್ನು ವಶಕ್ಕೆ ಪಡೆದು ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. 44 ಮಂದಿ ಮದ್ಯ ಕುಡಿದಿದ್ದುದು ವರದಿಯಲ್ಲಿ ದೃಢಪಟ್ಟಿದೆ.’
‘ವಾಹನಗಳನ್ನು ಜಪ್ತಿ ಮಾಡಿ, ದಂಡ ಪಾವತಿಸಲು ನ್ಯಾಯಾಲಯಕ್ಕೆ ದೋಷಾರೋಪ ಸಲ್ಲಿಸಲಾಗಿದೆ. 46 ಮಂದಿಯ ಚಾಲನಾ ಪರವಾನಗಿಯನ್ನು (ಡಿ.ಎಲ್) ರದ್ದುಪಡಿಸುವಂತೆ ಸಾರಿಗೆ ಇಲಾಖೆಗೂ ಪತ್ರ ಬರೆಯಲಾಗಿದೆ’ ಎಂದೂ ಅವರು ತಿಳಿಸಿದರು.
‘ವಿವಿಧ ಕಡೆ ಸಂಚಾರ ನಿಯಮ ಉಲ್ಲಂಘಿಸಿದ್ದ 1,408 ಮಂದಿ ವಿರುದ್ಧ ಕಾರ್ಯಾಚರಣೆ ವೇಳೆಯಲ್ಲೇ ದಂಡ ವಿಧಿಸಲಾಗಿದೆ’ ಎಂದೂ ಹೇಳಿದರು.
ಇಬ್ಬರ ಬಂಧನ:
ಬಳ್ಳಾರಿ ರಸ್ತೆಯಲ್ಲಿ ಬೈಕ್ ವ್ಹೀಲಿಂಗ್ ಮಾಡುತ್ತಿದ್ದ ಆರೋಪದಡಿ ಫಯಾಸ್ ಖಾನ್ ಹಾಗೂ ಮಹಮ್ಮದ್ ಆದಿಲ್ ಬೇಗ್ ಎಂಬುವರನ್ನೂ ಬಂಧಿಸಲಾಗಿದೆ ಎಂದು ರವಿಕಾಂತೇಗೌಡ ಮಾಹಿತಿ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.