ಬೆಂಗಳೂರು: ಪೀಣ್ಯ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ಬೆಳಿಗ್ಗೆ ಅಪಘಾತ ಸಂಭವಿಸಿದ್ದು, ಪ್ರಣೀತಾ (12) ಎಂಬಾಕೆ ಮೃತಪಟ್ಟಿದ್ದಾಳೆ. ಆಕೆಯ ಅಜ್ಜ ಧರ್ಮರಾವ್ (62) ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
‘ನಂದಿನಿ ಬಡಾವಣೆ ನಿವಾಸಿ ಧರ್ಮರಾವ್, ಮೊಮ್ಮಗಳು ಪ್ರಣೀತಾ ಜೊತೆ ದ್ವಿಚಕ್ರ ವಾಹನದಲ್ಲಿ ಹೊರಟಿದ್ದಾಗ ಲಾರಿ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಅಪಘಾತಕ್ಕೆ ಕಾರಣವಾದ ಲಾರಿ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಪೊಲೀಸರು ಹೇಳಿದರು.
‘ದಾಸರಹಳ್ಳಿಯಲ್ಲಿರುವ ಸಂಬಂಧಿಕರ ಮನೆಗೆ ಹೋಗಿದ್ದ ಧರ್ಮರಾವ್, ಮೊಮ್ಮಗಳ ಜೊತೆ ವಾಪಸು ನಂದಿನಿ ಬಡಾವಣೆಗೆ ಬರುತ್ತಿದ್ದರು. ಪೀಣ್ಯದ ಎಸ್ಆರ್ಎಸ್ ಜಂಕ್ಷನ್ ಬಳಿ ವೇಗವಾಗಿ ಬಂದ ಲಾರಿ, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿತ್ತು. ವಾಹನದ ಹಿಂಬದಿಯಲ್ಲಿದ್ದ ಪ್ರಣೀತಾ ರಸ್ತೆಗೆ ಬಿದ್ದಿದ್ದಳು. ತಲೆಗೆ ತೀವ್ರ ಪೆಟ್ಟು ಬಿದ್ದು ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಈ ಬಗ್ಗೆ ಪ್ರತ್ಯಕ್ಷದರ್ಶಿಗಳು ಹೇಳಿಕೆ ಪಡೆಯಲಾಗಿದೆ’ ಎಂದೂ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.