ಬೆಂಗಳೂರು: ಈಗ ನಡೆಯುತ್ತಿರುವ ವಿಧಾನ ಮಂಡಲ ಅಧಿವೇಶನದಲ್ಲಿಯೇ ವರ್ಗಾವಣೆ ಕಾಯ್ದೆಗೆ ಮಸೂದೆ ಮಂಡಿಸಲಾಗುವುದು ಎಂದು ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಭರವಸೆ ನೀಡಿದರು.
ವರ್ಗಾವಣೆ ಕಾಯ್ದೆ ವಿಳಂಬ ಖಂಡಿಸಿ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಮತ್ತು ಪ್ರಾಂಶುಪಾಲರ ಸಂಘ ವತಿಯಿಂದ ಮಲ್ಲೇಶ್ವರದಲ್ಲಿರುವ ಪದವಿಪೂರ್ವ ಶಿಕ್ಷಣ ಇಲಾಖೆಯ ಕೇಂದ್ರ ಕಚೇರಿಯ ಮುಂಭಾಗದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.
ಸಂಘದ ಪದಾಧಿಕಾರಿಗಳನ್ನು ವಿಧಾನಸೌಧದಲ್ಲಿರುವ ತಮ್ಮ ಕಚೇರಿಗೆ ಆಹ್ವಾನಿಸಿ ಚರ್ಚಿಸಿದ ಸಚಿವರು, ಇತರ ಬೇಡಿಕೆಗಳ ಕುರಿತು ಅಧಿಕಾರಿಗಳ ಜೊತೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಆಶ್ವಾಸನೆ ನೀಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಕೆ.ಟಿ. ಶ್ರೀಕಂಠೇಗೌಡ, ಕೆ.ವೈ. ನಾರಾಯಣಸ್ವಾಮಿ, ಎಸ್.ವಿ. ಸಂಕನೂರು, ಅರುಣ್ ಶಹಾಪೂರ, ಹನುಮಂತಪ್ಪ ನಿರಾಣಿ, ಉಪನ್ಯಾಸಕರ ಸಂಘದ ಗೌರವಾಧ್ಯಕ್ಷ ತಿಮ್ಮಯ್ಯ ಪುರ್ಲೆ, ಅಧ್ಯಕ್ಷ ನಿಂಗೇಗೌಡ ಎ.ಎಚ್., ಕಾರ್ಯಾಧ್ಯಕ್ಷ ಎಸ್.ಆರ್. ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಶಿವರಾವ್ ಮಾಲಿಪಾಟೀಲ ಇದ್ದರು.
ಪ್ರತಿಭಟನೆ: ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ನೂರಾರು ಉಪನ್ಯಾಸಕರು ಪದವಿ ಪೂರ್ವ ಇಲಾಖೆ ಕಚೇರಿಯ ಮುಂಭಾಗದ ರಸ್ತೆಯಲ್ಲಿ ಕುಳಿತು ಧರಣಿ ನಡೆಸಿದರು. ಧರಣಿ ಸ್ಥಳಕ್ಕೆ ಬಂದ ಕೆ.ಟಿ. ಶ್ರೀಕಂಠೇಗೌಡ, ಎಸ್.ವಿ. ಸಂಕನೂರ್, ಎಸ್.ಎಲ್. ಬೋಜೇಗೌಡ, ಹಣಮಂತಪ್ಪ ನಿರಾಣಿ, ಬೇಡಿಕೆಗಳ ಬಗ್ಗೆ ಸದನದಲ್ಲಿ ವಿಷಯ ಪ್ರಸ್ತಾಪಿಸುವುದಾಗಿ ಉಪನ್ಯಾಸಕರಿಗೆ ಭರವಸೆ ನೀಡಿದರು.
ಕಚೇರಿಯ ಆವರಣದಲ್ಲಿ ಪ್ರತಿಭಟನೆ ನಡೆಸಲು ಉಪನ್ಯಾಸಕರಿಗೆ ಪೊಲೀಸರು ಅವಕಾಶ ನೀಡಲಿಲ್ಲ. ಇದೇ ವೇಳೆ ಕಚೇರಿಗೆ ಬಂದ ಇಲಾಖೆಯ ನಿರ್ದೇಶಕಿ ಸ್ನೇಹಲ್ ಅವರನ್ನು ತರಾಟೆಗೆ ತೆಗೆದುಕೊಂಡ ಉಪನ್ಯಾಸಕರು, ಬೀದಿಯಲ್ಲಿ ಕುಳ್ಳಿರಿಸಿದ ಪೊಲೀಸರ ಕ್ರಮಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಉಪನ್ಯಾಸಕರ ಸಮಸ್ಯೆಗಳನ್ನು ಶ್ರೀಕಂಠೇಗೌಡ ಮತ್ತು ಸಂಕನೂರು ಅವರು ನಿರ್ದೇಶಕರಿಗೆ ವಿವರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.