ಬೆಂಗಳೂರು: ನಗರದ ಎರಡು ಕಡೆ ಬೆಂಕಿ ಅವಘಢ ಸಂಭವಿಸಿದ್ದು, ಭಾರಿ ಪ್ರಮಾಣದ ಹಾನಿ ಉಂಟಾಗಿದೆ.
‘ಕಾವೇರಿಪುರದಲ್ಲಿರುವ ಸೊಳ್ಳೆ ಪರದೆ ತಯಾರಿಸುವ ಕಾರ್ಖಾನೆಯಲ್ಲಿ ಶನಿವಾರ ತಡರಾತ್ರಿ ಬೆಂಕಿ ಕಾಣಿಸಿಕೊಂಡಿತ್ತು. ಕೆಲ ನಿಮಿಷಗಳಲ್ಲೇ ಬೆಂಕಿ ಕೆನ್ನಾಲಗೆ ಹೆಚ್ಚಾಗಿ ಹೊತ್ತಿ ಉರಿಯಲಾರಂಭಿಸಿತ್ತು. ಸ್ಥಳಕ್ಕೆ ಬಂದ ಅಗ್ನಿಶಾಮಕದ ದಳದ ಸಿಬ್ಬಂದಿ ಬೆಂಕಿ ನಂದಿಸಿದರು’ ಎಂದು ಪ್ರತ್ಯಕ್ಷರ್ಶಿಯೊಬ್ಬರು ಹೇಳಿದರು.
‘ಹೇಮಾದ್ರಿ ನಾಯ್ಡು ಎಂಬುವರು ಕಾರ್ಖಾನೆ ನಡೆಸುತ್ತಿದ್ದರು. 15 ಮಗ್ಗದ ಯಂತ್ರಗಳು, ಸೊಳ್ಳೆ ಪರದೆಗಳು, ಪೀಠೋಪಕರಣಗಳು ಸುಟ್ಟಿವೆ. ಅಂದಾಜು ₹ 14 ಲಕ್ಷ ಹಾನಿಯಾಗಿದೆ’ ಎಂದು ಅಗ್ನಿಶಾಮಕ ಸಿಬ್ಬಂದಿಯೊಬ್ಬರು ತಿಳಿಸಿದರು.
ಪತ್ರಿಕೆ ಕಚೇರಿಯಲ್ಲಿ ಬೆಂಕಿ: ರಾಜಾಜಿನಗರದ ರಾಜ್ಕುಮಾರ್ ರಸ್ತೆಯಲ್ಲಿರುವ ಅಭಿಮಾನಿ ಪ್ರಕಾಶನದ ಪತ್ರಿಕೆ ಕಚೇರಿಯಲ್ಲಿ ಭಾನುವಾರ ಸಂಜೆ ಬೆಂಕಿ ಅವಘಡ ಸಂಭವಿಸಿದೆ.
ಕಚೇರಿಯ ಮೊದಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಕ್ರಮೇಣ ಬೆಂಕಿ ಕೆನ್ನಾಲಗೆ ಹೆಚ್ಚಾಗಿತ್ತು. ಕಿಟಕಿಯಿಂದಲೂ ಬೆಂಕಿ ಹೊರ ಬಂದು ಉರಿಯುತ್ತಿತ್ತು. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ, ಎರಡು ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು.
‘ಕಂಪ್ಯೂಟರ್ಗಳು, ಪೀಠೋಪಕರಣ ಹಾಗೂ ಇತರೆ ವಸ್ತುಗಳು ಸುಟ್ಟಿವೆ. ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ವಿದ್ಯುತ್ ಶಾರ್ಟ್ ಸರ್ಕೀಟ್ನಿಂದ ಬೆಂಕಿ ಹೊತ್ತಿಕೊಂಡಿರುವ ಅನುಮಾನವಿದೆ’ ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.